ಸಂಪದದಲ್ಲಿ ಹೊಸತು! | Sign up | Login | Font Help
Planet Kannada | ಪ್ಲಾನೆಟ್ ಕನ್ನಡ
  • Sampada Initiative
  • Kannada Learning Center
  • Sampada Community
  • ಸಂಪರ್ಕಿಸಿ
Home › ಪ್ಲಾನೆಟ್ ಕನ್ನಡ

ಅಂತರಂಗ

Syndicate content
'ಅಂತರಂಗ'ಕ್ಕೆ ಸ್ವಾಗತ. ಬದುಕು ಬಹಳ ವಿಶೇಷವಾದದ್ದು, ಭೌತಿಕವಾಗಿ ಒಂದು ನೆಲೆಯಲ್ಲಿರುವ ನಾವು ಹಾಗು ಸ್ವಚ್ಛಂದವಾಗಿ ವಿಹರಿಸುವ ನಮ್ಮ ಮನಸ್ಸು ಇವುಗಳ ನಡುವಿನ ತಾಕಲಾಟ ಪೀಕಲಾಟಗಳ ದಾಖಲೆ ಈ ಬರಹ. ನಮ್ಮ ಭಾಷೆ ನಮಗೆ ದೂರವಾದಂತೆ ನಾವು ಅದರ ಹತ್ತಿರ ಹತ್ತಿರ ಹೋಗುವ ಪ್ರಯತ್ನ. ನಿಮ್ಮ ಅನಿಸಿಕೆಗಳಿಗೆ ಸ್ವಾಗತ.
URL: http://antaranga.blogspot.com/
Updated: 1 hour 9 min ago

ಆನೆ ಭಾರ ಆನೆಗೆ ಇರುವೆ ಭಾರ ಇರುವೆಗೆ

Sun, 2008-11-23 16:23

ಈ ವರ್ಷದ ಆಗಷ್ಟು ಎರಡರ ಮಧ್ಯಾಹ್ನ 1:11:25 (August 02, 08) ಇದ್ದ ನ್ಯಾಷನಲ್ ಸಾಲದ ಗಡಿಯಾರದ ಪ್ರಕಾರ US ನ ಪ್ರತಿಯೊಂದು ಫ್ಯಾಮಿಲಿಯ ದೇಶದ ಸಾಲದ ಪಾಲು ಸುಮಾರು 81 ಸಾವಿರ ಡಾಲರುಗಳು. ಟೈಮ್ ಸ್ಕ್ವಯರ್ ಹತ್ತಿರದಲ್ಲಿದ್ದ ಈ ಗಡಿಯಾರದ ಚಿತ್ರವನ್ನು ನಾನು ಬಹಳ ವರ್ಷಗಳಿಂದ ತೆಗೆಯಬೇಕು ಎಂದುಕೊಂಡರೂ ಆಗದಿದ್ದುದು ಕೊನೆಗೆ ೨೦೦೮ ರಲ್ಲಿ ಕೈಗೂಡಿತು, ಆದರೆ ಏನಾಶ್ಚರ್ಯ ಈ ಗಡಿಯಾರದ ಅವಧಿಯೂ ಮುಗಿಯುತ್ತ ಬಂದಹಾಗಿದೆಯಲ್ಲ ಎಂದುಕೊಂಡವನಿಗೆ ನನ್ನ ಊಹೆಗೆ ತಕ್ಕಂತೆ ಈ ಗಡಿಯಾರದ ಡಿಜಿಟ್ಟುಗಳೆಲ್ಲ "ಖಾಲಿ" ಆಗಿ ಮತ್ತೆ ಈ ಗಡಿಯಾರದ ಡಿಜಿಟ್ಟುಗಳನ್ನು ಹೆಚ್ಚಿಸಬೇಕಾಗಿ ಬಂದಿತೆಯಂತೆ. ಅಂದರೆ ಈ ದೇಶದ ಸಾಲ ಹತ್ತು ಟ್ರಿಲಿಯನ್ ಡಾಲರ್‌ಗಳಿಗೂ ಹೆಚ್ಚು!

ಈ ಗಡಿಯಾರದ ಮೂಲ Durst Organization ಹೇಳಿಕೆ ಪ್ರಕಾರ ಮುಂದಿನ ವರ್ಷ ಇದರಲ್ಲಿನ ಸಂಖ್ಯೆಗಳನ್ನು ಹೆಚ್ಚಿಸುತ್ತಾರಂತೆ, ಹೀಗೆ ಹೆಚ್ಚಿಸುವ ಸಂಖ್ಯೆಗಳ ಬಳಕೆ ಇನ್ನೆಷ್ಟು ಬರುತ್ತದೋ ಕಾದು ನೋಡಬೇಕು.

ಅಂದಹಾಗೆ ಈ ಗಡಿಯಾರದ ಹಿಂದಿನ ತತ್ವವನ್ನು ಪಂಡಿತರಿಗೆ ಬಿಡೋಣ, ಅಂಥವರು ಈ ಬರಹದ ಓದುಗರ ಸಮುದಾಯದಲ್ಲಿದ್ದಲ್ಲಿ ನಮಗೂ ಒಂದಿಷ್ಟು ವಿವರವನ್ನು ತಿಳಿಸಬಾರದೇಕೆ?© copyright http://antaranga.blogspot.com
Categories: ಕನ್ನಡ ಪುಟಗಳು

ದೇವ್ರು ಇಲ್ಲಾ ಅಂತ ಅಂದೋರು ಯಾರು

Fri, 2008-11-21 13:40
ನಾವೆಲ್ಲಾ ಚಿಕ್ಕವರಿದ್ದಾಗ ದೇವ್ರು-ದೆವ್ವಗಳು ಇದ್ದಾವೋ ಇಲ್ಲವೋ ಅಂತ ಚಿಂತೆ-ಚಿಂತನೆ ನಡ್ಸಿ ನಡ್ಸಿ ಬಹಳ ಟೈಮು ಕಳೀತಿದ್ವಿ, ನಮ್ಮ ನಮ್ಮ ಮಟ್ಟಿನ ತತ್ವಗಳು ತರ್ಕಗಳು ನಮ್ಮನ್ನು ವಾದ-ವಿವಾದಗಳಲ್ಲಿ ತೊಡಗಿಸಿ ಕೆಲವೊಂದು ಕಥೆಗಳನ್ನು ಬಹಳ ರೋಚಕಗೊಳಿಸಿ (ಅಂದ್ರೆ ಮಸಾಲೆ ಸೇರಿಸಿ) ಹೇಳಿ ಹಂಚಿಕೊಳ್ಳುತ್ತಿದ್ದೆವು. ಪ್ರಪಂಚದಲ್ಲಿ ಇದ್ದ ಇಲ್ಲದ ದೆವ್ವ ಭೂತಗಳು, ಕೊಳ್ಳಿ ದೆವ್ವಗಳು ಇವೆಲ್ಲಾ ನಮ್ಮ ತಂಡದ ಅನುಪಸ್ಥಿತ ಸದಸ್ಯರಾಗಿದ್ದವು. ನಮ್ಮ ನಮ್ಮ ದೇವರುಗಳ ಜೊತೆಗೆ ನಮ್ಮೂರಿನ ಶ್ಮಶಾನದಲ್ಲಿದ್ದ ದೆವ್ವಗಳು ಹಾಗೂ ಅವುಗಳ ಕಥೆಗಳು ನಮ್ಮ ಜೊತೆಗೆ ಅಮೇರಿಕಕ್ಕೆ ಹೇಗೆ ಬಂದ್ವು, ಅವುಗಳಿಗೆ ವೀಸಾ ಕೊಟ್ಟೋರು ಯಾರು ಅನ್ನೋ ಪ್ರಶ್ನೆಗಳು ಇನ್ನು ಪ್ರಶ್ನೆಗಳಾಗೇ ಉಳಿದಿವೆ ಬಿಡಿ.

ಈ ತಣ್ಣನೆ ಹೊತ್ತಿನಲ್ಲಿ ದೇವ್ರ ಬಗ್ಗೆ ನೆನೆಸಿಕೊಳ್ಳೋದಕ್ಕೆ ಏನು ಕಾರಣ ಅಂತ ನನಗೇ ಅನ್ಸಿ ಒಂದು ನಗು ಹೊರಗೆ ಬಂತು, ಅದರ ಹಿಂದೇನೇ ದೇವ್ರ ಹೆಸರನ್ನ ಹಿಡಿದು ಒಂದಿಷ್ಟು ಕೀಟಲೆ ಮಾಡೋಣ ಅಂತ್ಲೂ ಅಂದುಕೊಂಡೆ, after all ಯಾವ ದೇವ್ರ ತಂಡವೂ ನಮ್ಮನ್ನೇನು sue ಮಾಡೋಲ್ಲ ಅಲ್ವೇ?

***

Thanks to my three year old - ಪ್ರತಿಯೊಂದು ಆಲ್ಟರ್‌ನೇಟ್ ಪದ ಇಂಚರಳ ಬಾಯಿಯಿಂದ ಹೊರಡೋದು "Why?" (but why, ಮತ್ತೆ ಅದಕ್ಕೆ ಅಮೇರಿಕನ್ ಆಕ್ಸೆಂಟಿನ ಟಚ್ ಜೊತೆ ಹಲವಾರು ವೇರಿಯೇಷನ್ನುಗಳೂ ಇವೆ!). ಅವಳ ಪ್ರಶ್ನೆಗಳಿಗೆ ಉತ್ತರ ಕೊಡೋ ಹಿನ್ನೆಲೆ ಅಥವಾ ನೆಪದಲ್ಲಿ ಈ ಕೆಳಗಿನ ಪ್ರಶ್ನೆಗಳು ಅಷ್ಟೇ...(ತಮಾಷೆಗೆಂದು)

- ದೇವ್ರು ಬ್ಲಾಕೋ ವೈಟೋ ಅಥವಾ ಮಿಕ್ಸೋ? ಅಥ್ವಾ ಕಲರ್ಡ್ ಸ್ಕಿನ್ನೋ? ಹೌದೌದು, ರಾಮ-ಕೃಷ್ಣರ ಚಿತ್ರಗಳನ್ನು ನೋಡಿ ಸ್ವಲ್ಪ ನೀಲಿಯಾಗಿರುತ್ವೆ, ಶಿವನ ಕಂಠವೂ ಕೂಡಾ ನೀಲಿ.
- ಈ ಬ್ರಹ್ಮನ ತಲೆ ಕೂದಲನ್ನು ಕತ್ತರಿಸೋ ಪ್ರವೀಣ ಕಲಾವಿದ ಯಾರು? ಆ ನಾಲ್ಕು ತಲೆಗಳ ನಡುವೆ ಅವನ ಕತ್ತರಿ ಹೇಗೆ ಸಲೀಸಾಗಿ ಹರಿದಾಡುತ್ತೆ? ಯಾವ ಬಾಯಿಯಿಂದ ಹರಿಯೋ ಸಂವಾದಕ್ಕೆ ಆ ನಾಪಿತ ಯಾವ ಉತ್ತರ ಕೊಡ್ತಾನೆ?
- ಈ ನಾಲ್ಕು ಕೈ ಇರೋ ದೇವತೆಗಳಿಗೆ ಬಟ್ಟೆ ಹೊಲಿದು ಕೊಡೋರು (ಅಂದ್ರೆ ಡಿಸೈನರ್ಸ್) ಯಾರು?
- ಹತ್ತು ತಲೆ ಇರೋ ರಾವಣ ಯಾವ ಬಾಯಲ್ಲಿ ಅನ್ನಾ ಹಾಕ್ತಿದ್ದ?
- ಶಂಕರ ಕೋಪದಲ್ಲಿ ತ್ರಿಶೂಲದಿಂದ ಬಾಲಕನ ತಲೆಯನ್ನು ಕತ್ತರಿಸಿದ (why?), ಭಂಟರು ಹೋಗಿ ಉತ್ತರಕ್ಕೆ ತಲೆ ಹಾಕಿ ಮಲಗಿದ ಆನೆ ತಲೆಯನ್ನು ಕತ್ತರಿಸಿ ತಂದರು (why?), ಹಾರ್ಟು, ಕಿಡ್ನಿ ಟ್ರಾನ್ಸ್‌ಪ್ಲಾಂಟ್ ಮಾಡೋದನ್ನ ಕೇಳಿದ್ದೇವೆ, ಪ್ರಾಣಿಯಿಂದ ಮನುಷ್ಯನಿಗೆ ತಲೆ ಟ್ರಾನ್ಸ್‌ಪ್ಲಾಂಟ್ ಮಾಡಿದ್ದು ಯಾವ ಸರ್ಜನ್ನು? ಅನಸ್ತೇಷಿಯಾ ಕೊಟ್ಟೋರು ಯಾರು? ಆ ಬಾಲಕನ ಕಡಿದು ಹೋದ ತಲೆಯನ್ನೇ ಹುಡುಕಿ ಮತ್ತೇಕೆ ಜೋಡಿಸಲಿಲ್ಲ, ಆ ಆನೆಯ ಮುಂಡ ಏನಾಯ್ತು? ಇಡೀ ಬ್ರಹ್ಮಾಂಡದಲ್ಲಿ ಬರೀ ಅದೊಂದು ಬಡಪಾಯಿ ಆನೆ ಮಾತ್ರ ಉತ್ತರಕ್ಕೆ ತಲೆ ಹಾಕಿ ಮಲಗಿತ್ತೇ?
- ಈ ಕ್ಲೀನ್ ಶೇವನ್ನ್ ವಿಷ್ಣು ಬಳಸೋ ಬ್ಲೇಡ್ ಯಾವ್ದು? ಕೇವಲ ಶಿವ, ರಾಘವೇಂದ್ರ ಸ್ವಾಮಿ, ಹನುಮಂತ ಗಡ್ಡ ಬೆಳೆಸಿಕೊಂಡಿರೋ ಚಿತ್ರ ಮಾತ್ರ ನೋಡೋಕೆ ಯಾಕೆ ಸಿಗುತ್ತೆ?

ಈ ಮೇಲಿನ ಏನೆಲ್ಲ ಪ್ರಶ್ನೆಗಳು (ಹಾಗೂ ಅವುಗಳ ಉತ್ತರಗಳು) ಇದ್ರೂ ನಾವು ದೇವರನ್ನ ಘಟ್ಟಿಯಾಗಿ ನಂಬಿದವರೇ, ಪ್ರತಿನಿತ್ಯ ಶ್ರೀ ಗಣೇಶಾಯ ನಮಃ ಅಂದೇ ನಮ್ಮ ಜೀವನಗತಿಯನ್ನು ಆರಂಭಿಸುವವರೇ. ಈ ಪ್ರಶ್ನೆಗಳನ್ನ ನಾನು ಯಾವತ್ತೂ ಯಾರಿಗೂ ಕೇಳಿದ್ದಿಲ್ಲ (ಇಲ್ಲಿಯವರೆಗೆ), ಇವುಗಳೆಲ್ಲ ಹೀಗೆ ಬಾಲಿಶ ಅನ್ನಿಸಿದ್ರೂ ಪ್ರಶ್ನೆ ಕೇಳಬೇಕಾದ ವಯಸ್ಸಿನಲ್ಲಿ ಕೇಳಿದ್ರೆ ಉತ್ತರ ಕೊಡೋ ಬದಲು ’ಹೋಗೋ ತಲೆಹರಟೆ, ಅಧಿಕಪ್ರಸಂಗಿ...’ ಅಂತ ಯಾರಾದ್ರೂ ಬೈತಾರೆ ಅನ್ನೋ ಅವ್ಯಕ್ತ ಭಯವನ್ನು ಯಾರು ಹುಟ್ಟಿಹಾಕಿದ್ರೋ ಯಾರಿಗೆ ಗೊತ್ತು?

***

ಹೀಗೇ ಒಂದು ದಿನ ವರ್ಜೀನಿಯಾದ ಅಲೆಕ್ಸಾಂಡ್ರಿಯಾ ಮನೆಯಲ್ಲಿ ನಮ್ಮ ಮನೆಯ ಗೋಡೆಗಳಿಗೆ ಬಣ್ಣ ಹಚ್ಚೋಣ ಅನ್ನೋ ಆಲೋಚನೆ ಬಂದಿದ್ದೇ ತಡ ಬಣ್ಣ ಹಚ್ಚಲು ಬೇಕಾದ ಪರಿಕರಗಳನ್ನೆಲ್ಲ ಜೋಡಿಸಿಕೊಂಡು ಸುಸಜ್ಜಿತನಾದೆ, ಮೊದಮೊದಲು ಇದ್ದ ಉತ್ಸಾಹ ಕೆಲ್ಸಾ ಮಾಡ್ತಾ ಮಾಡ್ತಾ ಬತ್ತಿ ಹೋಗೋದರ ಜೊತೆಗೆ ದೊಡ್ಡ ತಲೆನೋವು ಇದು ಅನ್ನೋ ಭಾವನೆ ಬಲವಾಗಿ ಮುತ್ತಿಕೊಳ್ಳತೊಡಗಿತು. ದಿನಗಳೆದ ಮೇಲೆ ಇನ್ನೇನು ಸುಮಾರಾಗಿ ಎಲ್ಲ ಕೆಲ್ಸ ಮುಗಿದು ಫಯರ್ ಪ್ಲೇಸಿನ ಮೇಲೆ ಇದ್ದ ಗೋಡೆಯನ್ನು ಅರ್ಧ ಪೈಂಟ್ ಮಾಡುವ ಹೊತ್ತಿಗೆ ಅಚಾನಕ್ಕಾಗಿ ಏರ್‌ಪೋರ್ಟಿನಿಂದ ನನ್ನ ಸ್ನೇಹಿತನ ಕರೆ ಬಂತು.

’I am hungry, tired, jet lagged, cold - come and get me out of here!' ಅನ್ನೋ ಆಜ್ಞೆ. ನಮ್ಮ ಮನೆಯಿಂದ ಡಲ್ಲಸ್ ಏರ್‌ಪೋರ್ಟಿಗೆ ಕನಿಷ್ಠ ಒಂದು ಘಂಟೆ ದೂರ, ಮೊದಲೇ ಕೆಲಸ ಕಳ್ಳ ನಾನು (ಬಣ್ಣ ಹಚ್ಚೋ ಕೆಲಸ) ಒಂದು ನೆವ ಸಿಕ್ಕಿತೆಂದು ಕೆಲಸವನ್ನು ಅಲ್ಲೇ ಬಿಟ್ಟು ಏರ್‌ಪೋರ್ಟಿನ ಕಡೆ ಹೊರಟೆ. ನಾನು ಬರುವ ಹೊತ್ತಿಗೆ ಸುಮಾರು ಮೂರ್ನಾಲ್ಕು ಘಂಟೆ ಕಳೆದು ಹೋಗಿತ್ತು, ಟ್ರೇನಲ್ಲಿ ಇದ್ದ ಪೈಂಟೂ ಹಾಗೂ ನನ್ನ ರೋಲರ್ರುಗಳು, ಬ್ರಷ್ಷೂ ಇವೆಲ್ಲ ಒಣಗಿ ಹೋಗಿ ಉಪಯೋಗಕ್ಕೆ ಬಾರದವಾಗಿತ್ತು. ನೀರಿನಲ್ಲಿ ತೊಳೆದು ಅದೇನೇನು ಮಾಡಿದರೂ ಮೊದಲಿನ ಹಾಗೆ ಬಣ್ಣ ಹಚ್ಚಲು ಬಾರದವಾಗಿ ಹೋಗಿದ್ದವು. ಅದೇ ತಾನೆ ಮನೆಗೆ ಬಂದ ನನ್ನ ಸ್ನೇಹಿತನಿಗೆ ಸಹಸ್ರ ನಾಮ ಹಾಕುತ್ತಲೇ ಮತ್ತೆ ಇದ್ದ ಬದ್ದ ಒಣಗಿ ಕೃಶವಾದ ರೋಲರುಗಳಿಂದಲೇ ಬಣ್ಣ ಹಚ್ಚುವ ಬುದ್ಧಿವಂತ ಸಾಹಸಕ್ಕೆ ತೊಡಗಿದ್ದ ನನಗೆ ಬುದ್ಧಿ ಕಲಿಸುವ ಸಲುವಾಗಿ ಫೈಯರ್ ಪ್ಲೇಸಿನ ಮೇಲಿನ ಗೋಡೆಯ ಬಣ್ಣ ಬರೆಬರೆಯಾಗಿ ಹೋಯಿತು, ಮೊದಲು ಇದ್ದದ್ದಕ್ಕಿಂತಲೂ ಹಾಳಾಗಿ ಹೋಯಿತು. ಅದೂ ಸೆಮಿ ಗ್ಲಾಸ್ ಪೈಂಟು, ಅದರ ಸ್ಥಿತಿ ಇನ್ನೂ ಕಷ್ಟವಾಗಿ ಹೋಗಿದ್ದ ಹಿನ್ನೆಲೆಯಲ್ಲಿ ನನ್ನ ಎಲ್ಲ ಕರ್ಮಾಕರ್ಮಗಳನ್ನು ಹಳಿಯುತ್ತ ಇದನ್ನೆಲ್ಲ ಹೇಗೆ ಸರಿಪಡಿಸಲಿ ಎಂದು ಯೋಚಿಸುತ್ತಿದ್ದ ನನಗೆ ಮರುದಿನ ಬಹಳ ಆಶ್ಚರ್ಯವೊಂದು ಕಾದಿತ್ತು.

ನಮ್ಮ ಮಹಡಿಯ ಮನೆಯ ಮೇಲೆ ಆಟಿಕ್‌ನಲ್ಲಿ ಆ ವರ್ಷ ಇದ್ದ ಮಹಾನ್ ಛಳಿಯಲ್ಲಿ ನೀರಿನ ಪೈಪುಗಳು ಒಡೆದು ಹೋಗಿ ಒಂದೆರಡು ಮಹಡಿಗಳ ಮನೆಗಳಲ್ಲೆಲ್ಲಾ ನೀರು-ನೀರು ಹರಿದುಹೋಗಿತ್ತು. ಎರಡು ಮಹಡಿ ಕೆಳಗಿರುವ ನಮ್ಮ ಮನೆಯಲ್ಲೂ ನೀರಿನ ಪ್ರಭಾವ ಕಾಣುತ್ತಿತ್ತು. ವಿಶೇಷವೆಂದರೆ ನಮ್ಮ ಮನೆಯ ಎಲ್ಲಾ ಗೋಡೆಯನ್ನು ಹೊರತುಪಡಿಸಿ ಕೇವಲ ಆ ಫೈಯರ್ ಪ್ಲೇಸಿನ ಮೇಲೆ ನಾನು ಕೆಟ್ಟದಾಗಿ ಪೈಂಟ್ ಮಾಡಿದ್ದೆನಲ್ಲ, ಅಲ್ಲಿ ಮಾತ್ರ ನೀರಿನ ಕಲೆ ಬಿದ್ದಿತ್ತು! It is true, ನನ್ನ ಕಣ್ಣನ್ನೇ ನಾನು ನಂಬದ ನಿಜ!

Thanks to america, it is not my problem any more! ನಮ್ಮ ಕಾಂಡೋ ಅಸೋಸಿಯೇಷನ್ನಿನ್ನ ಇನ್ಷೂರೆನ್ಸ್ ಪಾಲಿಸಿಯ ದಯೆಯಿಂದ ಎಲ್ಲೆಲ್ಲಿ ನೀರಿನ ಡ್ಯಾಮೇಜ್ ಇತ್ತೋ ಅದನ್ನೆಲ್ಲ ಅಸೋಸಿಯೇಷನ್ನ್ ನವರು ಸರಿಮಾಡಿಸಿಕೊಟ್ಟರು, ನಮ್ಮ ಫಯರ್ ಪ್ಲೇಸಿನ ಗೋಡೆಯನ್ನೂ ಸೇರಿ! ಅವತ್ತೇ ಅಂದುಕೊಂಡಿದ್ದು ನಾನು, ನನ್ನ ಆಕ್ರಂದನ ಆದ್ಯಾವ ಮುಗಿಲು (celing) ಮುಟ್ಟಿತೋ ಆ ದೇವರು ಕಣ್ಣು ಬಿಟ್ಟು ನಮ್ಮ ಗೋಡೆಯ ಬಣ್ಣವನ್ನು ಸರಿ ಮಾಡಿಕೊಟ್ಟನಲ್ಲ ಎಂದು. ಅವತ್ತಿಂದ ಇವತ್ತಿನವರೆಗೆ ದೇವರು ಇದ್ದಾನೆ ಅಂತ್ಲೇ ಅಂದುಕೊಂಡಿರೋದು ನಾನು, ಆದ್ರೆ ಅವತ್ತಿನಿಂದ ಮುಗಿಲು ನೋಡಿ ಆರ್ತನಾಗಿ ಮೊರೆ ಇಡುವಾಗ ಮನೆಯಿಂದ ಹೊರಗೆ ಪ್ರಾರ್ಥನೆಯನ್ನು ಸಲ್ಲಿಸುತ್ತೇನೆ, the last thing you want is another broken water pipe in the middle of a winter - that is below freezing weather.© copyright http://antaranga.blogspot.com
Categories: ಕನ್ನಡ ಪುಟಗಳು

ತುಮಕೂರಿನ ಶಾಲೆಯೂ ಬಡ್‌ಲೇಕಿನ ವೈನ್ ಅಂಗಡಿಯೂ...

Mon, 2008-11-17 05:37
ಈ ನವೆಂಬರ್ ಮಾಸದಲ್ಲಿ ಕನ್ನಡ-ಕನ್ನಡಿಗರ ಬಗ್ಗೆ ಬರೆಯದಿದ್ದರೆ ಅಪಚಾರವಾದಂತಲ್ಲವೇ?! ನಮ್ಮ ಕನ್ನಡಿಗರು ಯಾರು ಎಂದು ವ್ಯಾಖ್ಯಾನಿಸೋದು ಹಾಗಿರಲಿ, ದೇಶ-ವಿದೇಶಗಳ ಜನರಿಗೆ ವಿದ್ಯೆ ಹಂಚುವ ನಮ್ಮ ಕರುನಾಡಿನ ಸಂಸ್ಥೆಗಳಲ್ಲಿ ಓದಿದವರನ್ನು, ಕೊನೇಪಕ್ಷ ಕರ್ನಾಟಕದಲ್ಲಿ ಒಂದೈದು ವರ್ಷ ಕಳೆದವರನ್ನು ಕನ್ನಡಿಗರು ಎಂದು ನಾವು ಗಣನೆಗೆ ತೆಗೆದುಕೊಂಡಿದ್ದೇ ಆದರೆ ಐದು ಕೋಟಿ ಕನ್ನಡಿಗರ ಸಂಖ್ಯೆ ಬೆಳೆಯೋದಂತೂ ನಿಜ, ಆದರೆ ಕರ್ನಾಟಕದಲ್ಲಿ ಒಂದೈದು ವರ್ಷ ಓದಿ ಬೆಳೆದರೂ ’ಸ್ವಲ್ಪ-ಸ್ಪಲ್ಪ ಆತಾ ಹೈ’ ಅನ್ನೋ ಅಷ್ಟು ಮಟ್ಟಿಗೆ ಮಾತ್ರ ನಮ್ಮಲ್ಲಿಯ ವಿಸಿಟರುಗಳಿಗೆ ಕನ್ನಡ ಕಲಿಸೋದು ನಮ್ಮ ಉದಾರತೆ ಅಲ್ಲದೇ ಮತ್ತಿನ್ನೇನು?

ನಾವಿರುವ ಫ್ಲಾಂಡರ್ಸ್ ಊರಿನ ಅದೇ ಮೌಂಟ್ ಆಲಿವ್ ಟೌನ್‌ಶಿಪ್‌ಗೆ ಹೊಂದಿಕೊಂಡಿಂತಿರುವ ಊರೇ ಬಡ್ ಲೇಕ್. ಒಂದು ಎಂಟು ಸಾವಿರ ಜನರಿರುವ ಪುಟ್ಟ ಊರು, ಇಲ್ಲಿ ನಾವು ಕೆಲವು ಅಂಗಡಿಗಳಿಗೆ ಹೋಗಿ ಬರೋದು ಇದೆ, ಅವುಗಳಲ್ಲಿ ಸ್ಯಾಂಡಿಸ್ ಡಿಸ್ಕೌಂಟ್ ಲಿಕರ್ ಶಾಪ್ (Sandy's) ಕೂಡಾ ಒಂದು. ನಾನು ಮೊದಲು ಹೋದಾಗ ಇದು ಭಾರತೀಯ ಮೂಲದವರೊಬ್ಬರು ನಡೆಸುತ್ತಿರುವ ಸಣ್ಣ ಬಿಸಿನೆಸ್ ಎಂದು ಗೊತ್ತೇ ಇರಲಿಲ್ಲ, ಆ ಬಗ್ಗೆ ತಲೆಕೆಡಿಸಿಕೊಂಡಿರಲೂ ಇಲ್ಲ. ನಂತರ ಭೇಟಿ ನೀಡಿದಾಗ ಅಂಗಡಿಯ ಓನರ್ ಅನ್ನು ಕೇಳಿಯೇ ಬಿಟ್ಟೆ (ನಮ್ಮ ಸಂಭಾಷಣೆ ಇಂಗ್ಲೀಷ್-ಹಿಂದಿ ಮಿಶ್ರ ಭಾಷೆಯಲ್ಲಿ ನಡೆಯುತ್ತಿತ್ತು) - ತಾವು ಎಲ್ಲಿಯವರು ಎಂಬುದಾಗಿ. ಅವರು ಗುಜರಾತಿನ ಮೂಲದವರು ಎಂಬುದು ಗೊತ್ತಾಯಿತು. ನನ್ನ ಬಗ್ಗೆ ವಿಚಾರಿಸಿದ್ದಕ್ಕೆ ನಾವು ಕರ್ನಾಟಕದವರು ಎಂದು ಪರಿಚಯಿಸಿಕೊಂಡೆ. ’ಕರ್ನಾಟಕದಲ್ಲಿ ಎಲ್ಲಿ?’ ಎಂದು ಕೇಳಿದ್ದಕ್ಕೆ ಆಶ್ಚರ್ಯವಾಗಿ ’ಶಿವಮೊಗ್ಗ’ ಎಂದು ಉತ್ತರಕೊಡಲು, ’I know that place!' ಎಂಬ ಉತ್ತರ ಬಂತು.

ಶಿವಮೊಗ್ಗದ ಬಗ್ಗೆ ಹೇಗೆ ಗೊತ್ತು ಎಂದು ಕೆದಕಿ ಕೇಳಲು, ಅವರು ತುಮಕೂರಿನ ಸಿದ್ಧಗಂಗಾ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಓದಿದ್ದು ಎಂದೂ ತಿಳಿಯಿತು. ಉದ್ದೇಶ ಪೂರ್ವಕವಾಗಿ ಕೇಳಿದ ನನ್ನ ಮುಂದಿನ ಪ್ರಶ್ನೆ - ಕನ್ನಡದ ಪೆನೆಟ್ರೇಷನ್ ಅಥವಾ ಪ್ರಚಾರದ ಬಗ್ಗೆ - ’ಹಾಗಾದರೆ ನಿಮಗೆ ಕನ್ನಡ ಬರುತ್ತೆ!’ ಎನ್ನುವುದಕ್ಕೆ ’ಸ್ವಲ್ಪ-ಸ್ಪಲ್ಪ ಆತಾ ಹೈ’ ಎನ್ನುವ ಉತ್ತರ ಬಂತು. ಅವರ ಶ್ರೀಮತಿಯವರ ಹೆಸರು ಸಂಧ್ಯಾ ಎಂದು, ಅದನ್ನೇ ಬದಲಾಯಿಸಿ Sandy ಮಾಡಿಕೊಂಡಿದ್ದೂ ಗೊತ್ತಾಯಿತು.

***

ನಮ್ಮ ಹುಟ್ಟು-ಬೆಳವಣಿಗೆ-ವಿದ್ಯಾಭ್ಯಾಸ ಹಾಗೂ ನಾವು ಎಲ್ಲಿ (ಎಲ್ಲೆಲ್ಲಿ) ನೆಲೆಸುತ್ತೇವೆ ಎನ್ನೋದನ್ನು ಯೋಚಿಸಿಕೊಂಡಾಗ ಬಹಳಷ್ಟು ವಿಚಾರಗಳು ತಲೆತಿನ್ನತೊಡಗುತ್ತವೆ. ಭಾರತೀಯ ಸಂಜಾತ ಇಂಜಿನಿಯರ್ ಒಬ್ಬರು ಅಮೇರಿಕದ ಒಂದು ಸಣ್ಣ ಪಟ್ಟಣದಲ್ಲಿ ಡಿಸ್ಕೌಂಟ್ ಲಿಕರ್ ಎನ್ನುವ ಸ್ಮಾಲ್ ಬಿಸಿನೆಸ್ ನಡೆಸುತ್ತಿರುವುದು ಇಲ್ಲಿಯ ಚರ್ಚೆಯ ವಿಷಯ. ಪ್ರತಿಯೊಬ್ಬರದೂ ಅವರವರ ಜೀವನ ಶೈಲಿ - ಅದರಲ್ಲಿ ತಪ್ಪೇನೂ ಇಲ್ಲ.

ಇಲ್ಲಿಗೆ ನನಗೆ ಹೊಳೆದ ಅಂಶಗಳನ್ನು ಇಲ್ಲಿ ಬರೆದು ಹಾಕುತ್ತೇನೆ, ಅವುಗಳು ಯಾವುದೇ ರೀತಿಯ ಚರ್ಚೆಯನ್ನು ಮೂಡಿಸಲೂ ಬಹುದು, ಇರದೆಯೂ ಇರಬಹುದು:
- ನಾನು ಇಂಜಿನಿಯರ್ ಆಗುತ್ತೇನೆ ಎಂದು ಕನಸುಕಂಡು ಭಾರತೀಯ ವ್ಯವಸ್ಥೆಯಲ್ಲಿ ಇಂಜಿನಿಯರ್ ಆಗಿ ಹೊರಬಹುದಾದ ಪಧವೀದರನ ಹಿನ್ನೆಲೆ
- ಭಾರತದಲ್ಲಿ ಒಬ್ಬ ಇಂಜಿನಿಯರ್ ಅನ್ನು ಹೊರತರಲು ಸಮಾಜ ತೊಡಗಿಸುವ ಸಂಪನ್ಮೂಲಗಳು
- ಅಮೇರಿಕಕ್ಕೆ ಕನಸುಗಳನ್ನು ಹೊತ್ತುಕೊಂಡು ಬಂದು ಇಲ್ಲಿಯ ವ್ಯವಸ್ಥೆಯಲ್ಲಿ ಒಂದು ಸಣ್ಣ ಉದ್ಯಮವನ್ನು ಹುಡುಕಿಕೊಂಡು ಇಲ್ಲೇ ನೆಲೆಸುವ ನಿರ್ಧಾರವನ್ನು ಕೈಗೊಳ್ಳುವುದರ ಹಿಂದಿರುವ ಮನಸ್ಥಿತಿ
- ’ತಾನೇನು ಆಗಬೇಕು’ ಎನ್ನುವ ಗುರಿ ಹಾಗೂ ’ತಾನೆಲ್ಲಿ ತಲುಪಬಲ್ಲೆ / ತಲುಪಿದ್ದೇನೆ’ ಎನ್ನುವ ನಿಜ ಸ್ಥಿತಿಗಳ ವ್ಯತ್ಯಾಸ, if any
- ಅಮೇರಿಕದಲ್ಲಿದ್ದವರದೆಲ್ಲ ಗ್ರ್ಯಾಂಡ್ ಜೀವನವವಲ್ಲ ಎನ್ನುವ ಸಮಜಾಯಿಷಿ, ಒಂದು ಸಣ್ಣ ಉದ್ಯಮ ಬಹಳ ಫ್ರಾಫಿಟೆಬಲ್ ಆಗಿಯೂ ಇರಬಹುದು ಹಾಗೆ ಇರದಿರಲೂ ಬಹುದು
- ಹೀಗೆ ವಲಸೆಗಾರರಾಗಿ ಬಂದವರು ಮತ್ತು ಅವರ ಮುಂದಿನ ಸಂತತಿಗಳು ಸಮಾಜದ ಬೇರೆ ಬೇರೆ ಸ್ಥರಗಳಲ್ಲಿ ನೆಲೆನಿಲ್ಲಬಹುದಾದ ಬೆಳವಣಿಗೆ (ಒಬ್ಬ ಉದ್ಯಮದಾರ ಅಥವಾ ಪ್ರೊಫೆಷನಲ್ ಕುಟುಂಬದ ಹಿನ್ನೆಲೆಯವರ ಸಂತತಿ ಹಾಗೇ ಮುಂದುವರೆಯಬಹುದು ಎನ್ನುವ ಕಲ್ಪನೆಯ ವಿರುದ್ಧ ಹಾಗೂ ಪೂರಕವಾಗಿ)

***

’ನೀನು ದೊಡ್ಡವನಾದ ಮೇಲೆ ಏನಾಗ್ತೀಯೋ?’ ಅಂದ್ರೆ ನಾನಂತೂ ಮೊದಲೆಲ್ಲ ’ಪೈಲಟ್!’ ಅಂತಿದ್ದೆ. ನಮ್ಮ ವಂಶದವರು ಯಾವತ್ತೂ ಹತ್ತಿ ಕೂರದಿದ್ದ ಆಕಾಶಪಕ್ಷಿಯನ್ನು ನಡೆಸುವ ಕಾಯಕವೆಂದರೆ ಸುಮ್ಮನೆಯೇ? ಅವೆಲ್ಲ ನಾಲ್ಕನೇ ಕ್ಲಾಸು ಮುಗಿಸಿ ಮಾಧ್ಯಮಿಕ ತರಗತಿಗಳನ್ನು ತಲುಪುತ್ತಿದ್ದ ಹಾಗೆ ಬದಲಾದ ಹಾಗೆ ನೆನಪು. ನಾನು ಇವತ್ತು ನಡೆಸಿಕೊಂಡು ಬರುತ್ತಿರುವ ಪ್ರಾಜೆಕ್ಟ್ ಮ್ಯಾನೇಜರ್ ಕೆಲಸವನ್ನಂತೂ ನಾನೂ ಒಂದು ದಿನ ಮಾಡಿಕೊಂಡಿರುತ್ತೇನೆ ಎಂದು ಕನಸನ್ನಂತೂ ಕಂಡಿದ್ದಿಲ್ಲ ಆದರೆ ಎಲ್ಲೋ ಇದ್ದವನು ನಾನು ಇಲ್ಲಿಗೆ ಬಂದು ತಲುಪಿದ್ದು ಈ ಸ್ಥಿತಿಯಲ್ಲಿ ಈಗ ಇರೋದಂತೂ ನಿಜವೇ.

ನಮ್ಮ ಡೆಸ್ಟಿನಿ ನಮ್ಮ ಮೂಲ ಇವುಗಳ ಬಗ್ಗೆ ನಿಮಗಂತೂ ನಂಬಿಕೆ ಇದೆಯೋ ಇಲ್ಲವೋ. ಎಲ್ಲೋ ಅಹಮದಾಬಾದಿನ ಆಸುಪಾಸಿನಲ್ಲಿ ಹುಟ್ಟಿ ಬೆಳೆದು ತುಮಕೂರಿನಲ್ಲಿ ಪದವೀಧರನಾಗಿ ಮುಂದೆ ಈ ಬಡ್‌ಲೇಕಿನ ಅಂಗಡಿಯಿಂದ ಜನರಿಗೆ ಮದ್ಯ ಸರಬರಾಜು ಮಾಡುವ Sandy's Liquor ಅಂಗಡಿಯ ಮಾಲಿಕನ ನಸೀಬನ್ನು ನೆನೆದು ಹೀಗೆ ಬರೆಯಬೇಕಾಯಿತಷ್ಟೇ.© copyright http://antaranga.blogspot.com
Categories: ಕನ್ನಡ ಪುಟಗಳು

ಇತ್ತೀಚಿನ ಮೂರು ಬೆಳವಣಿಗೆಗಳು ಹಾಗೂ ಪ್ರತಿಕ್ರಿಯೆ

Tue, 2008-11-04 22:38
ಈ ದಿನಗಳಲ್ಲಿ ರೆಪ್ಪೆ ಮಿಟುಕಿಸುವುದರೊಳಗೆ ಏನೇನೆಲ್ಲ ಆಗಿ ಹೋಗೋ ಸಾಧ್ಯತೆಗಳಿರುವಾಗ ಪ್ರತಿಕ್ರಿಯೆಯನ್ನು ಒಡನೆಯೇ ದಾಖಲಿಸಬೇಕಾದ ಅಗತ್ಯ ಒಮ್ಮೊಮ್ಮೆ ಕಂಡು ಬರೋದು ನಿಜ. ಅಂದರೆ ಎಲ್ಲವೂ ಆಗಿ ಹೋದ ಮೇಲೆ ಅಲ್ಲಲ್ಲಿ ಸಿಗೋ ಪ್ರತಿಕ್ರಿಯೆ ವರದಿಗಳನ್ನು ಓದಿಕೊಂಡು ನಮ್ಮ ಅನಿಸಿಕೆ ಅಭಿಪ್ರಾಯವನ್ನು ದಾಖಲಿಸೋದು ಒಂದು ರೀತಿ, ಇಲ್ಲವೇ ಎಲ್ಲವೂ ಆಗಿ ಹೋಗುತ್ತಿರುವಾಗಲೇ ನಮ್ಮ ನಿಲುವು ಅಭಿಪ್ರಾಯವನ್ನು ದಾಖಲಿಸೋದು ಮತ್ತೊಂದು ರೀತಿ.

೧. ಉತ್ತರ ಅಮೇರಿಕದ ಮುಂದಿನ ಅಧ್ಯಕ್ಷರು ಯಾರು?
ನನ್ನ ಪ್ರಕಾರ ಸೆನೆಟರ್ ಮೆಕ್ಕೈನ್ ಪಾಪ್ಯುಲಾರಿಟಿ ಮತವನ್ನು ಗೆಲ್ಲದಿದ್ದರೂ ಟ್ರೆಡಿಷನಲ್ ರಿಪಬ್ಲಿಕನ್ ಪಕ್ಷದ ಸ್ಟ್ರಾಂಗ್‌ಹೋಲ್ಡ್ ದೆಸೆಯಿಂದ ಹಾಗೂ ಇಂಡಿಯಾನ, ಫ್ಲೋರಿಡಾ, ಒಹಾಯೋ, ಪೆನ್ಸಿಲ್‌ವೇನಿಯಾ ಮೊದಲಾದ ಸ್ವಿಂಗ್ ಸ್ಟೇಟ್‌ಗಳಲ್ಲಿ ಬೇಕಾದ ಮತವನ್ನು ಗಳಿಸಿದ್ದೇ ಆದರೆ ಮುಂದಿನ ಪ್ರೆಸಿಡೆಂಟ್ ಆಗುವುದು ಖಂಡಿತ.

ಸದ್ಯದ ಸಮೀಕ್ಷೆಗಳ ಪ್ರಕಾರ ಸೆನೆಟರ್ ಒಬಾಮಾ ಪಾಪ್ಯುಲರ್ ಮತವನ್ನು ಗೆಲ್ಲುವಂತೆ ಕಂಡರೂ ಮತ್ತೆ ಈ ಸ್ವಿಂಗ್ ಸ್ಟೇಟ್‌ಗಳಲ್ಲಿಯ ಮತವೇ ಮುಖ್ಯವಾಗುತ್ತದೆ. ಈ ವರ್ಷದ ಚುನಾವಣೆಯಲ್ಲಿ ಬಹಳ ಹೆಚ್ಚಿನ ಜನರು ಮತಕಟ್ಟೆಗಳಿಗೆ ಬರುತ್ತಿರುವುದನ್ನು ನೀವೂ ಗಮನಿಸಿರಬಹುದು. ಮೊಟ್ಟ ಮೊದಲನೇ ಬಾರಿಗೆ ಅಮೇರಿಕಕ್ಕೆ ಆಫ್ರಿಕನ್ ಅಮೇರಿಕನ್ ಪ್ರೆಸಿಡೆಂಟ್ ಇರಲಿ ಎಂದು ಎಷ್ಟೋ ಜನರು ಪೋಲ್‌ಗಳಲ್ಲಿ ಹೇಳಿದ್ದರೂ ಸಹ ಕೆಲವರ ಮನಸ್ಸಿನಲ್ಲಿ ತಮ್ಮನ್ನು ರೇಷಿಯಲ್ ಎಂದು ತಿಳಿದುಕೊಳ್ಳದಿರಲಿ ಎಂದು ಸುಳ್ಳು ಸಮೀಕ್ಷೆಗಳಿಗೆ ಉತ್ತರ ಕೊಟ್ಟಿರಬಹುದು ಎಂಬ ಸಂದೇಹವೂ ಮನಸ್ಸಿನಲ್ಲಿದೆ.

ಚುನಾವಣೆಯ ಉತ್ತರವೇನಾದರೂ ಇರಲಿ - ಆಫ್ರಿಕನ್ ಅಮೇರಿಕದ ಮೂಲದ ಪ್ರೆಸಿಡೆಂಟ್ ಚುನಾಯಿತರಾದಲ್ಲಿ ಅಮೇರಿಕದ ಜನರ ಮನೋವೈಶಾಲ್ಯತೆಯನ್ನು ಜಗತ್ತಿಗೆ ಸಾರುವುದರ ಜೊತೆಗೆ ಉತ್ತರ ಅಮೇರಿಕದ ಕಾಂಗ್ರೆಸ್, ಸೆನೆಟ್ ಹಾಗೂ ಪ್ರೆಸಿಡೆನ್ಸಿ ಎಲ್ಲವೂ ಡೆಮೋಕ್ರಾಟ್‌ಮಯವಾಗುವುದು ನಿಜ. ಅಲ್ಲದೇ ಯಾವ ಪ್ರೆಸಿಡೆಂಟ್ ಹಾಗೂ ಸರ್ಕಾರ ಮುಂದೆ ಬಂದರೆ ನಮ್ಮ ದೇಶಕ್ಕೆ ಅದರಿಂದ ಏನು ಅನುಕೂಲ/ಅನಾನುಕೂಲ ಎನ್ನುವುದು ಇನ್ನೂ ದೊಡ್ಡ ಪ್ರಶ್ನೆ.

೨. ಕನ್ನಡ ಹಾಗೂ ಶಾಸ್ತ್ರೀಯ ಸ್ಥಾನಮಾನ
ಓಹ್, ಉತ್ತರ ಅಮೇರಿಕದಿಂದ ನೇರವಾಗಿ ಕರ್ನಾಟಕ್ಕೆ ಬರೋಣ. ತಮಿಳರ ಭಾಷಾ ವ್ಯಾಮೋಹ ಹಾಗೂ ಅವರು ಅಳವಡಿಸಿಕೊಂಡ ತಂತ್ರಗಳು ಕನ್ನಡದ ಔದಾರ್ಯಗಳಿಗೆ ಅನ್ವಯವಾಗುವಲ್ಲಿ ಇಷ್ಟು ಕಾಲ ಬೇಕಾಯಿತು. ಈ ಬೆಳವಣಿಗೆ ನಿಜವಾಗಿಯೂ ಸ್ವಾಗತಾರ್ಹ. ನಮಗೂ ನಮ್ಮತನವಿದೆ, ನಮ್ಮ ಭಾಷೆಗೆ ಅದರದ್ದೇ ಆದ ಇತಿಹಾಸವಿದೆ. ಎಲ್ಲಕ್ಕಿಂತ ಮುಖ್ಯವಾಗಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಕ್ಕೆ ಸಿಗುವ ಮನ್ನಣೆ, ಕನ್ನಡ ಸಂಬಂಧಿ ಯೋಜನಗೆಗಳು ಅಭಿವೃದ್ಧಿಗಳು ಇವೆಲ್ಲವೂ ನಮಗೆ ಬೇಕಾಗಿತ್ತು. ಕೊನೆಗೆ ಏನಿಲ್ಲವೆಂದರೂ ೨೦೦೮ ರಲ್ಲಾದರೂ ಕೇಂದ್ರದ ಅಸ್ತು ಸಿಕ್ಕಿತಲ್ಲ ಅದು ಮುಖ್ಯ.

೩. ಭಾರತ ಹಾಗೂ ನ್ಯೂಕ್ಲಿಯರ್ ಎನರ್ಜಿ ಸಂಬಂಧಿ ಬೆಳವಣಿಗೆಗಳು
ಇತ್ತೀಚೆಗಷ್ಟೇ ಅಮೇರಿಕದ ಅಪ್ರೂವಲ್ ಮೊಹರನ್ನು ಒತ್ತಿಕೊಂಡ ಕಾಗದ ಪತ್ರಗಳು ಹಾಗೂ ಮನಮೋಹನ್ ಸಿಂಗ್ ಆಡಳಿತಕ್ಕೆ ಸಿಕ್ಕ ಜಯ ವಿಶ್ವದಾದ್ಯಂತ ಭಾರತವನ್ನು ನ್ಯೂಕ್ಲಿಯರ್ ಅಪ್ರೂವ್ಡ್ ದೇಶವನ್ನಾಗಿ ನೋಡಲು ಸಹಾಯ ಮಾಡಿದವು. ಈ ಹಿಂದೆ ಅಂತರಂಗದಲ್ಲಿ ಬರೆದ ಹಾಗೆ ಹೆಚ್ಚಿನ ಎನರ್ಜಿ ಬೇಡಿಕೆಗೆ ನ್ಯೂಕ್ಲಿಯರ್ ಮೂಲ ಬೇಕೇ ಬೇಕು ಎನ್ನುವ ಪರಿಸ್ಥಿತಿ ಇರುವಾಗ ಕನ್ವೆನ್ಷನಲ್ ಹಾಗೂ ಉಳಿದ ಸೋರ್ಸ್‌ಗಳ ಜೊತೆ ನ್ಯೂಕ್ಲಿಯರ್ ತಂತ್ರಜ್ಞಾನವನ್ನು ನಾವು ಬಳಸುವಂತಾಗುವುದು ಬಹಳ ಮಹತ್ವದ ವಿಷಯ ಹಾಗೂ ಬೆಳವಣಿಗೆ. ನಾವೆಲ್ಲ ಮುಂದೆ ಏನಾಗುವುದೋ ಎಂದು ಕಾದು ನೋಡಬೇಕಷ್ಟೆ.© copyright http://antaranga.blogspot.com
Categories: ಕನ್ನಡ ಪುಟಗಳು

ಗಂಟಲ ಒಳಗಿನ ಪದಗಳು

Sat, 2008-11-01 08:06
ನಾವೆಲ್ಲ ಹಾಗೇ ನಮ್ಮ ಬಾಯಲ್ಲಿ ಪದಗಳೇ ಹೊರಡೋದಿಲ್ಲ, ಯಾರೋ ನಮ್ಮ ಗಂಟಲಿನಲ್ಲಿ ಶವೆಲ್ಲನ್ನು ತೆಗೆದು ಪದಗಳನ್ನು ಗೋಚಿ ಬದಿಗೆ ಎತ್ತಿ ಹಾಕಿದ ಹಾಗೆ ಒಂದು ರೀತಿ ಛಳಿಗಾಲದಲ್ಲಿ ರಸ್ತೆಯ ಬದಿ ಗೋಚಿಹಾಕಿದ ಬಿಳಿಯ ಹಿಮದಂತೆ. ನಮ್ಮಲ್ಲಿನ ಪದಗಳೋ ಹಿಮದ ಹಾಗೆ ಕಪ್ಪು ಮಣ್ಣಿನ ಬಣ್ಣ ಕಂಡು ಬಿಸಿಲಿಗೆ ಕರಗಿ ಮತ್ತೆ ನೀರಾಗಿ ಇಂದಲ್ಲ ನಾಳೆ ಮತ್ತೆ ಬಿಳಿಯ ಹಿಮವಾಗುವ ಪ್ರಕ್ರಿಯೆಯಂತೆ ಹಿಂದೆ ಬಾರದೇ ಎಲ್ಲೋ ಅನತಿ ದೂರದ ಮೋಡಗಳ ಹಾಗೆ ದೂರವೇ ಉಳಿದು ಬಿಡುತ್ತವೆ. ನಾವು ನಮ್ಮ ಭಾಷೆ ನಮ್ಮತನವೆನ್ನುವುದು ಪದೇ ಪದೇ ಅವುಗಳ ಅಸ್ತಿತ್ವವನ್ನು ಹುಡುಕಿಕೊಳ್ಳುವ ಎಂದೂ ಮುಗಿಯದ ಲೂಪ್‌ನಲ್ಲಿ ಸೇರಿಕೊಂಡು ಮತ್ತೆ ಬರೋದೇ ಇಲ್ಲ.

ನಮಗೆ ನಮ್ಮತನ ನಮ್ಮದರ ನಡುವೆ ಇರೋದು ಭಾಷೆಯ ಸಮಸ್ಯೆಯೋ, ಅಭಿರುಚಿಯ ಸಮಸ್ಯೆಯೋ ಅಥವಾ ನಮ್ಮ ಸಂಸ್ಕೃತಿಯೇ ಹಾಗೋ? ಇಲ್ಲಿ ದಿನಕ್ಕೆ ನೂರು ಬಾರಿ ’ಧನ್ಯವಾದಗಳು’ ಎಂದು ಒಣಗಂಟಲಿನಲ್ಲಿ ಅನ್ನುವ ನಾವು ನಮ್ಮೂರುಗಳಲ್ಲಿ ಅಂದದ್ದಿಲ್ಲ. ಎಂದೋ ಯಾರದ್ದೋ ಕೈ ಹಿಡಿದುಕೊಂಡು ಕೃತಾರ್ಥರಾಗಿದ್ದೇವೆ, ನಿಂತು ಹೋದ ಮದುವೆಯನ್ನು ನಡೆಸಿಕೊಟ್ಟವರ ಕುರಿತು ಕನ್ಯಾಪಿತೃಗಳು ಗದ್ಗದರಾದ ಹಾಗೆ ಮಂಜುಕಣ್ಣಿನವರಾಗಿದ್ದೇವೆ, ದೊಡ್ಡವರು-ದೇವರ ಮುಂದೆ ಆರ್ತರಾಗಿದ್ದೇವೆ, ಅಷ್ಟೇ. ನಮ್ಮೂರಿನ ಮೇಷ್ಟ್ರುಗಳೋ ಬರೀ ಬೈಯುತ್ತಲೇ ಕಲಿಸುತ್ತಾ ಹೋದರು, ಬೈಗಳು ಮಾಮೂಲಿ ಸಂವಹನಾ ಶಬ್ದಗಳಾದವು. ನಮ್ಮ ಹಿರಿಯರು ನಮ್ಮನ್ನು ಕಣ್ಣಿನಿಂದಲೇ ಹೆದರಿಸುತ್ತಾ ಬಂದರು, ಅವರನ್ನು ನೋಡಿದಾಗಲೆಲ್ಲ ತಾಯ ಮಡಿಲಿನಲ್ಲಿ ಮಗು ಕಂಡು ಕೇಳರಿಯದ ಗುಮ್ಮನ ಹೆಸರನ್ನು ಕೇಳಿ ಮುದುರಿಕೊಳ್ಳುವ ಹಾಗೆ ಮಾಡಿದರು, ಶಕ್ತಿ ಸಾಧಿಸುವವರು ಸಾಧಿಸಿ ತೋರಿಸಿದರು, ಇಲ್ಲದವರು ಇದ್ದವರ ವ್ಯತ್ಯಾಸವನ್ನು ಗುರುತಿಸುತ್ತಲೇ ಬಂದರು.

ನಮ್ಮ ಭಾಷೆ, ಪದ ಬಂಡಾರ ಬೆಳೆಯಲೇ ಇಲ್ಲ. ನಮ್ಮ ಸ್ನೇಹಿತರು ವಾರಿಗೆಯವರು ಇಂಗ್ಲೀಷೇ ಸರ್ವಸ್ವ ಎಂದುಕೊಂಡು ಊಟ ಮಾಡಿದವರು ಕೈತೊಳೆದುಕೊಂಡಷ್ಟು ಸಲೀಸಾಗಿ ಉತ್ತಮವಾಗೇ ಮಾತನಾಡುತ್ತಿದ್ದ ಕನ್ನಡವನ್ನು ಮರೆತು, ಹರಿದು-ಬೆರೆತು-ಅರಿಯದೇ ಇಂಗ್ಲೀಷಿಗೆ ತೊಡಗಿಕೊಂಡರು. ನಮ್ಮ ಸಹಪಾಠಿಗಳಿಗಾಗಲೇ ಇಂಗ್ಲೀಷು ಓದಿನ ಹುಚ್ಚು ಹತ್ತಿ ಹೋಗಿತ್ತು, ಇಂಗ್ಲೀಷು ಸಿನಿಮಾಗಳು ಸರ್ವವ್ಯಾಪಿಗಳಾಗಿ ಹೋಗಿದ್ದವಾಗಲೇ. ಕನ್ನಡ ಸಿನಿಮಾಗಳ ಕೌಟುಂಬಿಕ ಚಿತ್ರಣಕ್ಕೆ ಮೀರಿ ನಮ್ಮ ಪಡ್ಡೆತನಕ್ಕೆ ಇಂಗ್ಲೀಷಿನ ಬೆತ್ತಲೆ ಚೆಲುವೆಯರು ಉತ್ತರ ಕೊಡತೊಡಗಿದ್ದರು, ನಮಗೆ ಗೊತ್ತಿಲ್ಲದೇ ನಾವೇ ಮಾರು ಹೋಗಿದ್ದೆವು - ನಮ್ಮ ಭಾಷೆ, ಔಚಿತ್ಯ, ಗಾಂಭೀರ್ಯತೆಯನ್ನು ಮೀರಿ ಮತ್ತೆಂದೂ ಹಿಂದೆ ಬರದಷ್ಟು ದೂರಕ್ಕೆ. ನಾವು ಬಳಸುವ ಶಾಲೆ ಮೇಜು ಪಡಸಾಲೆ ಕಾಲುಚೀಲ ಎನ್ನುವ ಪದಗಳು ನಮ್ಮ ಓರಗೆಯವರ ಹುಬ್ಬೇರುವುದಕ್ಕೆ ಕಾರಣವಾದವು. ಈ ಕಡೆ ಕನ್ನಡವನ್ನೂ ಓದದ ಆ ಕಡೆ ಇಂಗ್ಲೀಷನ್ನೂ ಸರಿಯಾಗಿ ತಿಳಿಯದವರ ಜೊತೆ ನಾವು ಕನ್ನಡವನ್ನು ಬಲ್ಲ ಕೆಲವರು ಅಲ್ಪರಾದೆವು. ನಮ್ಮೊಳಗೆ ನಾವು ಅಂತರ್ಮುಖರಾಗಿಕೊಂಡು ವರ್ಷಕ್ಕೊಮ್ಮೆ ಕಷ್ಟಪಟ್ಟು ಸಂಪಾದಿಸಿಕೊಳ್ಳುವ ಕಾಲೇಜು ವಾರ್ಷಿಕೋತ್ಸವದ ಮ್ಯಾಗಜೀನಿನಲ್ಲಿ ಒಂದು ಕವನ ಲೇಖನ ಬರೆಯುವಷ್ಟರಲ್ಲಿ ಸ್ಖಲಿತರಾಗಿ ಹೋಗುವಲ್ಲಿ ನಮ್ಮ ಅಂತಃಸತ್ವ ಮಿತಗೊಂಡಿತು. ಹಾಗೆ ಬರೆದ ಲೇಖನ ನಮ್ಮ ನಡುಗೆ ಉಡುಗೆ ಮಾತುಕಥೆಗಳು ಓರಗೆಯವರಿಗೆ ಗಾಂಧೀತನವಾಗಿ ಕಂಡಿತು. ರೆಟ್ಟೆಗಳನ್ನು ಬಲಿಸಿಕೊಳ್ಳದ ನಾವು ಮಿದುಳನ್ನು ಬಲಿಸಿಕೊಳ್ಳುವತ್ತ ವಾಲಿಕೊಂಡಾಗ ರೆಕ್ಕೆ ಬಲಿತ ಕೆಲವು ಪಡ್ಡೆ ಹುಡುಗರು ನಮ್ಮಕ್ಕ ತಂಗಿಯರನ್ನು ಕೀಟಲೆ ಮಾಡಿ ನಕ್ಕರೆ ಅವರಿಗೆರಡೇಟು ಬಿಡದಿರುವುದು ಮೇಲ್ನೋಟಕ್ಕೆ ಆದರ್ಶವೆಂದುಕೊಂಡರೂ ಅದು ನಮ್ಮ ಕೈಲಾಗದ ಮಾತು ಎನ್ನುವುದು ನಮ್ಮ ಹೊಟ್ಟೆಯಲ್ಲೇ ಹುಟ್ಟಿ ಸತ್ತ ಸತ್ಯವಾಗಿ ಹೋಗಿತ್ತು.

***

ಹೀಗೇ ಒಂದು ತಣ್ಣನೆ ಸೋಮವಾರದ ಸಂಜೆ. ಅಮೇರಿಕದಲ್ಲಿ ನಮ್ಮ ಬದುಕಿನ ಸುಗಮ ಸಂಗೀತವೆನ್ನುವುದು ಆರಂಭ ಹಾಗೂ ಅಂತ್ಯವಾಗುವುದು ವಾರಾಂತ್ಯಗಳಲ್ಲೇ ಎಂದು ಯಾರೋ ಬರೆದು ಶಾಸನ ಮಾಡಿಟ್ಟು ಹೋದ ಹಾಗಿದ್ದುದನ್ನು ಉಲ್ಲಂಘಿಸಿ ಸೋಮವಾರ ಆಫೀಸಿನ ತರುವಾಯ ನಡೆದ ಮುಖಾಮುಖಿ ಮಾತುಕಥೆಯೊಂದರಲ್ಲಿ ಜಯಂತ ಕಾಯ್ಕಿಣಿ ನನ್ನನ್ನು ಕೇಳಿದರು, ’ನಿಮ್ಮ ತಲೆಮಾರುಗಳಲ್ಲಿ ಮೇಷ್ಟ್ರುಗಳೇ ಇಲ್ಲ, ಭಾರತದಲ್ಲಿ ಚೆನ್ನಾಗಿ ಅಂಕಪಡೆದ ಎಲ್ಲರೂ ಉದ್ಯಮವನ್ನು ಕುರಿತ ಶಿಕ್ಷಣವನ್ನು ಪಡೆಯಲು ಸ್ಪರ್ಧಿಸಿದಂತೆ ಮೂಲ ಶಿಕ್ಷಣ - ಹ್ಯುಮಾನಿಟೀಸ್, ಬೇಸಿಕ್ ಸೈನ್ಸ್, ಎಜುಕೇಷನ್, ಆರ್ಥಶಾಸ್ತ್ರ ಮುಂತಾದವುಗಳು - ಎನ್ನುವುದನ್ನು ಕಲಿಯುವರೂ ಇಲ್ಲ, ಕಲಿಸುವವರೂ ಇಲ್ಲ. ಹೀಗಾದರೆ ಮುಂಬರುವ ತಲೆಮಾರು ಹೇಗಿದ್ದಿರಬಹುದು?’

ನಾನೆಂದೆ, ’ಬೇಕಾದಷ್ಟು ಹೊಸ ಶಾಲೆಗಳಿವೆ, ಖಾಸಗಿಯವರು ಜೋರಾಗಿಯೇ ಇದ್ದಾರೆ, ಇವುಗಳ ನಡುವೆ ಗುರುಗಳೇ ಇಲ್ಲವೇ?’

ಅವರೆಂದರು, ’ಇಲ್ಲ, ಚೆನ್ನಾಗಿ ಓದುವವರು ವೃತ್ತಿನಿರತ ಪ್ರಕ್ರಿಯೆಗಳಲ್ಲಿ ತೊಡಗಿಕೊಂಡರೆ ಉಳಿದ ಶಿಕ್ಷಣ ಕ್ಷೇತ್ರಗಳಿಗೆ ಕಾಲಿರುಸುವವರು ಮೊದಲಿನವರು ಕಷ್ಟಪಡುತ್ತಿದ್ದಷ್ಟಂತೂ ಕಷ್ಟಪಡುತ್ತಿಲ್ಲ.’

ಇದು ನಿಜ, ನಾವು ಹತ್ತನೇ ತರಗತಿ ಪಾಸ್ ಮಾಡುತ್ತಿದ್ದ ಹೊತ್ತಿಗೇನೇ ಫಸ್ಟ್ ಕ್ಲಾಸ್ ಪಡೆದವರು ಪಿಯುಸಿ ಸೈನ್ಸ್ ಅಥವಾ ಡಿಪ್ಲೋಮಾ ವಿಭಾಗ, ಸೆಕೆಂಡ್ ಹಾಗೂ ಥರ್ಡ್ ಕ್ಲಾಸ್ ಪಾಸ್ ಮಾಡಿದವರು ಕಾಮರ್ಸ್ ಅಥವಾ ಆರ್ಟ್ಸ್ ತೆಗೆದುಕೊಳ್ಳುತ್ತಿದ್ದುದು ಸಹಜವಾಗಿತ್ತು. ಅಲ್ಲಲ್ಲಿ ಎಕ್ಸೆಪ್ಷನ್ನುಗಳನ್ನು ನೋಡಿದ್ದೇನೆ, ತುಂಬ ಬುದ್ಧಿವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮಗೆ ಬೇಕಾದ ವಾಣಿಜ್ಯ, ಅರ್ಥಶಾಸ್ತ್ರವನ್ನು ತೆಗೆದುಕೊಂಡು ಅದನ್ನು ಪಾಠ ಮಾಡುತ್ತಿದ್ದ ಮೇಷ್ಟ್ರುಗಳಿಗಿಂತಲೂ ಅವರೇ ಹೆಚ್ಚು ಓದಿಕೊಂಡಿದ್ದ ಪ್ರಸಂಗಗಳನ್ನು.

ಕಾಯ್ಕಿಣಿಯವರ ನಡುವಿನ ಮಾತುಕಥೆಯಲ್ಲಿ ಮತ್ತೊಂದು ವಾಸ್ತವಾಂಶ ಸ್ಪಷ್ಟವಾಗಿತ್ತು: ಇಂದಿನ ಜನ ಅದೆಷ್ಟು ಬೇಗ ಪ್ರತಿಫಲವನ್ನು ಆಶಿಸುತ್ತಾರೆ ಎಂಬುದು ಆಶ್ಚರ್ಯ ಮೂಡಿಸಿತ್ತು. ಟಿವಿ ಕಾರ್ಯಕ್ರಮಗಳಿಗೆ ತಯಾರಾಗಲೆಂದೇ ಮಕ್ಕಳಿಗೆ ಸಂಗೀತ ಕಲಿಸಿಕೊಡುವ ವ್ಯವಸ್ಥೆ ಹುಟ್ಟಿದೆ, ಒಂದು ವಾರ-ತಿಂಗಳು ಅಥವಾ ಕೆಲವೇ ತಿಂಗಳುಗಳಲ್ಲಿ ಮಕ್ಕಳಲ್ಲಿ ಸಂಗೀತವನ್ನು ತುಂಬುತ್ತೇವೆನ್ನುವ ಗ್ಯಾರಂಟಿ ಕೊಡುವ ವ್ಯವಸ್ಥೆ ಬಂದಿದೆ ಅಥವಾ ಹಾಗಿರುವುದಕ್ಕೆ ಡಿಮ್ಯಾಂಡ್ ಇದೆ ಎನ್ನುವ ಮಾತು ಆಶ್ಚರ್ಯ ಮೂಡಿಸಿತ್ತು. ಎಲ್ಲವೂ ವೇಗವಾಗಿ ಆಗಬೇಕೆನ್ನುವ ವ್ಯವಸ್ಥೆಯಲ್ಲಿ ಸಾಧನೆಗೆ ಸ್ಥಳವಿಲ್ಲ. ಸಾನ್ಯಾ ಮಿರ್ಜಾ ಲಿಯಾಂಡರ್ ಪೇಸ್ ದಿನಕ್ಕೆ ಹತ್ತು ಘಂಟೆಗಳಿಗಿಂತ ಹೆಚ್ಚು ಕಠಿಣ ಪರಿಶ್ರಮ ಪಟ್ಟು ಮುಂದೆ ಬರುವುದನ್ನು ನೋಡಿಕೊಂಡೂ ಜನರು ಒಂದೇ ಉಸಿರಿನಲ್ಲಿ ಚಾಂಪಿಯನ್ನರಾಗುವ ಕನಸು ಕಂಡರೆ ಅದಕ್ಕೇನೆನ್ನೋಣ? ನಮ್ಮ ಗುರುಗಳು ತಮ್ಮ ಜೀವನ ಪರ್ಯಂತ ಹಿಂದೂಸ್ತಾನೀ ಸಂಗೀತ ಸಾಧನೆ ಮಾಡಿಯೂ ಸಂಗೀತವೆನ್ನುವುದು ಒಂದು ಸಾಗರ ಅದರಲ್ಲಿ ನಾನು ಕುಡಿದದ್ದು ಒಂದು ಬೊಗಸೆ ಉಪ್ಪು ನೀರು ಅಷ್ಟೇ ಎನ್ನುವುದನ್ನು ಇಂದಿನ ವೇಗಮಯ ಜೀವನದ ಮುಂದೆ ಸರಳವಲ್ಲದ್ದು ಎನ್ನೋಣವೆ?

***

ಏಕೋ ಅಶ್ವಥ್ ತಮ್ಮ ಹಾಡಿನ ನಡುವೆ ’ನಾವು ಭಾರತೀಯರು...’ ಎಂದಾಗ ಸ್ವಲ್ಪ ಹೊತ್ತಿನ ಮೊದಲು ’...ಇವರು ನಿಮ್ಮ ದೇಶದವರು!’ ಎಂದು ಯಾರನ್ನೋ ಪರಿಚಯಿಸಿಕೊಟ್ಟ ನನ್ನನ್ನೇ ನೋಡಿ ಕೈ ಮಾಡಿ ’ನಾವು ಭಾರತೀಯರು...’ ಎಂದು ಹಾಡಿದಂತಾಯಿತು. ನಾವು ಭಾರತೀಯರು ಎನ್ನುವುದರಲ್ಲಿ ಹುರುಳಿದೆ ತಿರುಳಿದೆ, ಒಂದೇ ಒಂದು ಮಾತಿನಲ್ಲಿ ಎಲ್ಲವೂ ಇದೆ. ಅಮೇರಿಕದಲ್ಲೇ ಹುಟ್ಟಿ ಬೆಳೆದವನಂತಿರುವ ನನ್ನ ಸಹೋದ್ಯೋಗಿ ನಮ್ಮ ಕಾನ್‌ಫರೆನ್ಸ್ ಕಾಲಿನ ನಡುವೆ ಇನ್ಯಾರನ್ನೋ ಕುರಿತು, ’ಅದೊಂದು ಆರ್ಡರನ್ನು ಹೇಗೋ ತಳ್ಳಿಬಿಡು, ಸ್ವಲ್ಪ ಅಡ್ಜಷ್ಟ್ ಮಾಡಿಕೋ...’ ಎಂದು ಹೇಳಿದಾಗ ನನ್ನ ಪಕ್ಕೆಗೆ ತಿವಿದಂತಾಗಿ ಒಂದು ಕಡೆ ರಿಪೀಟಬೆಲ್ ಪ್ರಾಸೆಸ್ಸುಗಳನ್ನು ಎಸ್ಟಾಬ್ಲಿಷ್ ಮಾಡುವುದು ನನ್ನ ಜವಾಬ್ದಾರಿ ಅಂತಹುದರಲ್ಲಿ ’ಸ್ವಲ್ಪ ಅಡ್ಜಷ್ಟ್ ಮಾಡಿಕೊಳ್ಳುವುದನ್ನು’ ಅದು ಹೇಗೆ ರಿಪೀಟ್ ಮಾಡಲಿ? ಅಥವಾ ಅದು ನಮ್ಮ ಕ್ರೋಮೋಸೋಮು, ಡಿಎನ್‍ಎ ಗಳಲ್ಲಿ ಯಾವತ್ತೂ ರಿಪೀಟ್ ಆಗುತ್ತಲೆಯೇ ಇದೆಯೋ?

ನಮ್ಮ ಗುರುಗಳೆಲ್ಲ ಇಂಗ್ಲೀಷನ್ನು ಗಾಢವಾಗಿ ಓದಿಕೊಂಡ ಪಂಡಿತರು ಅಥವಾ ಅಂತಹ ಪಂಡಿತರನ್ನು ಬಲ್ಲವರು. ಅವರು ಇಂಗ್ಲೀಷನ್ನು ಓದಿಕೊಂಡ ಹಿನ್ನೆಲೆಗೆ ತಕ್ಕಂತೆ ಕನ್ನಡದ ಗಂಧ-ಗಾಳಿಯನ್ನೂ ಬಲ್ಲವರು ಒಂದು ರೀತಿ ಫ್ಲ್ಯಾಷ್ ಲೈಟ್‌ನ ನೇರಕ್ಕೆ ಒಂದು ಒಂದು ಬೆಳಕಿನ ವರ್ತುಲ ಬಿದ್ದರೆ ಅದಕ್ಕೆ ಸುತ್ತಲಿನ ಪ್ರಭಾವಳಿ ಇದ್ದಂತೆ. ನಾವುಗಳೆಲ್ಲ ನಮಗೆ ಬೇಕಾದುದನ್ನು ಓದಿಕೊಂಡು ಬೇಕಾದಷ್ಟು ಅಂಕಗಳನ್ನು ಗಳಿಸಿ ಮುಂದೆ ಬಂದೆವು. ಇಲ್ಲಿಯವರೆಗೂ ನಮ್ಮ ಸಬ್ಜೆಕ್ಟಿನ ಬಗ್ಗೆಯೇ ಯಾರೇ ಪ್ರಶ್ನೆ ಕೇಳಿದರೂ ’ಅದರ ಬಗ್ಗೆ ನನಗೆ ಗೊತ್ತಿಲ್ಲ’ ಎನ್ನುವ ಉತ್ತರವನ್ನು ಆ ಪ್ರಶ್ನೆಗೆ ಉತ್ತರ ಹುಡುಕುವುದಕ್ಕಿಂತ ಮೊದಲು ಯೋಚಿಸಿಕೊಳ್ಳುತ್ತಿದ್ದೆವು. ಒಂದು ದಿನವೂ ನಾವು ಕಲಿಯುವುದರ ಹಿನ್ನೆಲೆ ಮುಂದೆ ಅದನ್ನು ಜೀವನದಲ್ಲಿ ಬಳಸುವ ಬಗ್ಗೆ ತಲೆ ಕೆಡಿಸಿಕೊಂಡು ಗೊತ್ತಿಲ್ಲದವರಾಗಿದ್ದೆವು. ನಮಗೆ ಗೊತ್ತಿರದೆಯೋ ಗೊತ್ತಿದ್ದೋ ಮುಂದಿನ ಜಗತ್ತಿಗೆ ನಮ್ಮನ್ನು ನಾವು ತಯಾರಿ ಮಾಡಿಕೊಳ್ಳುತ್ತಿದ್ದೆವು ಆದರೆ ಅದರ ವೇಗ ಅಲ್ಲಲ್ಲಿ ಕುಂಠಿತಗೊಳ್ಳುತ್ತಿದ್ದುದೂ ಇತ್ತು.

ಮತ್ತದೇ ಮಾತು, ಕೆಲವೊಂದು ಭಾವನೆಗಳು ಭಾಷೆಯನ್ನೂ ಮೀರುತ್ತವೆಯಂತೆ, ಆದರೆ ಆ ಸಮಸ್ಯೆಯ ಆಳ ನಮಗೆಂದೂ ಅರಿವಾಗದು ಏಕೆಂದರೆ ನಮ್ಮ ಭಾಷೆಯ ಆಳವೇ ಅಷ್ಟು. ಯಾರಾದರೊಡನೆ ಮುಖ ಕೊಟ್ಟು ಮಾತನಾಡೋಣವೆಂದರೆ ಅವರು ಇಂಗ್ಲೀಷಿನ ಮೊರೆ ಹೊಕ್ಕು ಕೊನೆಗೆ ಮಾತೇ ನಿಂತು ಹೋಗುವ ಸ್ಥಿತಿ ಬರುವ ಹಾಗೆ ನಮಗೆ ನಮ್ಮತನವೇ ದೊಡ್ಡದಾಗಿ ಯಾವತ್ತೂ ಎಲ್ಲೂ ಕಾಣೋದಕ್ಕೆ ಒಂದು ಕಾರಣ ಹುಟ್ಟಿಕೊಳ್ಳುತ್ತದೆ. ನಮ್ಮ ನ್ಯೂಕ್ಲಿಯರ್ ಕುಟುಂಬಗಳಲ್ಲಿ ಹಲವಾರು ಧ್ವನಿಗಳು ಹುಟ್ಟೋದೇನೋ ನಿಜ, ಆದರೆ ಅವುಗಳು ರಾಗವಾಗಿ ಬೆಳೆಯೋದೇ ಇಲ್ಲ, ಒಂದು ಆಲಾಪನೆಯನ್ನು ಅರ್ಥ ಮಾಡಿಕೊಳ್ಳುತ್ತಿದ್ದ ಹಾಗೆ ಮತ್ತೊಂದು ಹುಟ್ಟಿದರೂ ಹುಟ್ಟಬಹುದು ಎನ್ನುವ ನಿರೀಕ್ಷೆಯಲ್ಲೇ ಬದುಕು-ಭಾವನೆ-ಬಂಡವಾಳವೆಲ್ಲವೂ ಕಳೆದು ಹೋದ ಹಾಗೆ. ಹ್ಞೂ, ನಮ್ಮ ನಮ್ಮ ಮುಸುಡಿಯನ್ನು ನಾವು ನಾವೇ ನೋಡಿಕೊಂಡು ನಮ್ಮ ಪ್ರಪಂಚದಲ್ಲಿ ನಾವೇ ತೇಲಾಡಿ ಓಲಾಡಿಕೊಂಡು ನಾವೇ ಬರೆದು ಸಂಪಾದಿಸಿ ಪ್ರಕಟಿಸುವ ಸಾಹಿತ್ಯದಲ್ಲಾದರೂ ಅದೇನು ಮಹತ್ತವಿದ್ದಿರಬಹುದು? ತೀಡಿ ಗಂಧವಾಗಲಿಲ್ಲ, ಕಾಯಿಸಿ ಬಗ್ಗಿ ಹೊಳೆಯಲಿಲ್ಲ ಎನ್ನುವ ಸಂಬಂಧಗಳಲ್ಲಿ ಸೂಕ್ಷ್ಮವಾದರೂ ಎಲ್ಲಿಂದ ಬಂದೀತು? ನಿಜವಾದ ನೋವಿಗೆ ಸ್ಪಂದಿಸದೇ ಅದೆಷ್ಟು ದಿನ ಎಲ್ಲವನ್ನೂ ಮುಂದೆ ತಳ್ಳಲಾದೀತು?© copyright http://antaranga.blogspot.com
Categories: ಕನ್ನಡ ಪುಟಗಳು

If you elect me as a president...

Wed, 2008-10-22 15:40
ಪ್ರೆಸಿಡೆಂಟ್ ಆಫ್ ವಾಟ್? ಅಂತ ಪ್ರಶ್ನೆ ಬರೋದು ಸಹಜ, ಪ್ರೆಸಿಡೆಂಟ್ ಆಫ್ ವಾಟ್‌ಎವರ್...ಎಂದುಕೊಂಡು ಮುಂದೆ ಹೋಗೋಣ...ನಾವೆಲ್ಲ ಶಾಲಾ ದಿನಗಳಲ್ಲಿ ’ಎಲೈ ಹುಚ್ಚರ ಸಂಘದ ಅಧ್ಯಕ್ಷನೇ...’ ಎಂದು ನಮ್ಮ್ ನಮ್ಮೊಳಗೆ ಬೈದುಕೊಳ್ಳುತ್ತಿದ್ದುದೂ ನೆನಪಿಗೆ ಬಂತು.

ಏನೇ ಇರಲಿ ರಾಜಕಾರಣ ಹಾಗೂ ಆಶ್ವಾಸನೆ ಎನ್ನುವುವುಗಳು ಒಂದೇ ತಾಯಿಯ ಮಕ್ಕಳ ಹಾಗೆ, ನಮ್ಮ ಸುತ್ತ ಮುತ್ತ ನಡೆಯೋ ಬೇಕಾದಷ್ಟು ಚುನಾವಣೆಗಳ ಕ್ಯಾಂಪೇನುಗಳಲ್ಲಿ ’ನೀವು ನನ್ನನ್ನು ಆರಿಸಿ ತಂದಿದ್ದೇ ಆದರೆ...’ ಎನ್ನುವ ಪ್ರಣಾಳಿಕೆಗಳು ಪುಂಖಾನುಪುಂಕವಾಗಿ ಹೊರಬರುತ್ತಲೇ ಇವೆ. ಹಾಗೆ ಮಾನವಕುಲದಲ್ಲಿ ಪ್ರಚುರಗೊಂಡ ಆಶ್ವಾಸನೆಗಳಲ್ಲಿ ಶೇಕಡಾ ಹತ್ತರಷ್ಟು ಈಡೇರಿದ್ದರೂ ಇಂದು ನಾವು ಈ ಸ್ಥಿತಿಯಲ್ಲಿರುತ್ತಿರಲಿಲ್ಲ ಎನ್ನುವುದು ಬೇರೆ ವಿಷಯ. (ಸುಮ್ಮನೇ ಆರೋಪ ಹೊರಿಸ್ತೀನಿ, ಆದ್ರೆ ಅದಕ್ಕೆ ತಕ್ಕ ದಾಖಲೆ ಕೊಡೋದಿಲ್ಲ ಅನ್ನೋದಕ್ಕೆ ಈ ವಾಕ್ಯವೇ ಸಾಕ್ಷಿ - ದಾಖಲೆಗಳನ್ನು ಪೋಣಿಸಿ ಯಾರು ಉದ್ದಾರವಾಗಿದ್ದಾರೆ ನೀವೇ ಹೇಳಿ).

ಹೀಗೇ ದಿನನಿತ್ಯದ ಘಟನಾವಳಿಗಳನ್ನು ಅವಲೋಕಿಸಿ ಈ ಕೆಳಗಿನ ಅಣಿಮುತ್ತುಗಳನ್ನು ನಾನು ನನ್ನ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿದ್ದೇನೆ, ನೀವು ಓದಿನೋಡಿ ನಂತರ ನಿಮ್ಮ ಅಧ್ಯಕ್ಷನನ್ನು ನೀವೇ ಗುರುತಿಸಿ ಮತ ನೀಡಿ!

***
ನೀವು ನನ್ನನ್ನು ಅಧ್ಯಕ್ಷನನ್ನಾಗಿ ಚುನಾಯಿತನನ್ನಾಗಿ ಮಾಡಿದರೆ....
- I will eliminate all school buses from the roads for one week!
Oh, school buses! ಅಮೇರಿಕದ ಶಾಲಾ ವಾಹನಗಳು ಎಂದರೆ ’ಅಯ್ಯಪ್ಪಾ’ ಅನ್ನೋ ಹಾಗೆ, ಒಂದು ರೀತಿ ರಸ್ತೆ ಮೇಲಿನ ಟ್ಯಾಂಕರುಗಳು ಅವು. ನನ್ನ ಒಂದು ಊಹೆಯ ಪ್ರಕಾರ ಪ್ರತಿ ಶಾಲಾ ಬಸ್ಸಿಗೆ ಇಲ್ಲಿ ಕನಿಷ್ಟ ಇಪ್ಪತ್ತೈದು ಕನ್ನಡಿಗಳಾದರೂ ಇರಬಹುದು ಜೊತೆಗೆ ಒಂದು ಸಾವಿರ ಮಿನುಗುವ ಲೈಟ್‌ಗಳು (ಉತ್ಪ್ರೇಕ್ಷೆ). ಶಾಲಾ ಬಸ್ಸಿಗೆ ರಸ್ತೆಗಳ ಮೇಲೆ ಆದ್ಯತೆ, ಅವು ನಿಂತರೆ ಎಲ್ಲರೂ ನಿಲ್ಲಬೇಕು, ಅದೂ ನಾನು ಬಳಸೋ ಒನ್ ಲೇನ್ ರಸ್ತೆಯ ಕಥೆ ದೇವರೇ ಗತಿ. ಶಾಲಾ ಬಸ್ಸುಗಳ ಲೀಡರ್‌ಶಿಪ್ ನಲ್ಲಿ ನಾವೆಲ್ಲ ಅವುಗಳ ಹಿಂದೆ, ಮೇಷ್ಟ್ರು ನಾಯಕತ್ವದಲ್ಲಿ ವಿದ್ಯಾರ್ಥಿಗಳೇನೋ ಹಿಂದೆ ಸಾಲುಗಟ್ಟುತ್ತಾರೆ ಆದರೆ ಶಾಲೆಪಾಲೆ ಮುಗಿಸಿ ಅವುಗಳಿಗೆಲ್ಲ ಗುಡ್‌ಬೈ ಹೇಳಿರೋ ನನಗೇಕೆ ಈ ಶಿಕ್ಷೆ, ಅದಕ್ಕೆಂದೇ ಐವತ್ತೆರಡು ವಾರಗಳ ವರ್ಷಗಳಲ್ಲಿ ನನ್ನ ಆಡಳಿತದಲ್ಲಿ ಒಂದು ವಾರ ಸ್ಕೂಲ್ ಬಸ್ಸುಗಳು ರಸ್ತೆಯ ಮೇಲೆ ಬಾರದಂತೆ ಮಾಡುವ ಆಶ್ವಾಸನೆ.

- I will iradicate "retirement" (the word) from the dictionary!
ನಮ್ಮ ಕಾಲದವರು ರಿಟೈರ್ ಆಗುವ ಮಾತೇ ಬರೋದಿಲ್ಲ ಬಿಡಿ. ನಾವೆಲ್ಲ ಬಲ್ಲ ಹಾಗೆ ಬೇಬಿ ಬೂಮರ್ಸ್ ತಲೆಮಾರಿನವರು ಮತ್ತೆ ತಮ್ಮನ್ನು ಕೆಲಸದಲ್ಲಿ ತೊಡಗಿಸಿಕೊಳ್ಳೋ ಹಾಗೆ ಇಂದಿನ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿದರೆ ನಮ್ಮೆಲ್ಲ ಅಲ್ಪಸ್ವಲ್ಪ ಉಳಿತಾಯಗಳು ದಿನೇದಿನೇ ಕರಗುತ್ತಿರುವ ಶೋಚನೀಯ ಸ್ಥಿತಿಯನ್ನು ಕಂಡರೆ ನಮ್ಮ ತಲೆಮಾರಿಗೆ ’ನಿವೃತ್ತ’ ಅನ್ನೋ ಪದವೇ ದೂರವಾಗುವ ಹಾಗೆ ಕಾಣುತ್ತದೆ. ಆದ್ದರಿಂದ ಈ ಪದವನ್ನು ನಿಘಂಟಿನಿಂದ ತೆಗೆಯೋಣ ಎಂದು ಸಂಕಲ್ಪಿಸಿಕೊಂಡಿದ್ದೇನೆ.

- I will eliminate the 8 O'clock from the dial!
ಇದು ಒಂಥರ ಇಂಟರೆಸ್ಟಿಂಗ್ ಕಾನ್ಸೆಪ್ಟ್. ಗಡಿಯಾರದ ಡಯಲಿನಲ್ಲಿ ಏಳು ಘಂಟೆಯ ನಂತರ ಒಂಭತ್ತು ಘಂಟೆ ಬರುವಂತೆ ಮಾಡುವುದು. ಒಂದು ರೀತಿ ಸೀನಿಯರ್ ಜಾರ್ಜ್ ಬುಷ್ ಪ್ರೆಸಿಡೆನ್ಸಿಯ ನಂತರ ಒಂದೇ ಸಮನೆ ಜ್ಯೂನಿಯರ್ ಜಾರ್ಜ್ ಬುಷ್ ಪ್ರೆಸಿಡೆನ್ಸಿ ಬಂದ ಹಾಗೆ ಮಧ್ಯೆ ಬರುವ ಕ್ಲಿಂಟನ್ ನ ಎಂಟು ವರ್ಷಗಳ ಆಡಳಿತವನು ಇತಿಹಾಸದಿಂದ ಡಿಲ್ಲೀಟ್ ಮಾಡಿದ ಹಾಗೆ...

ಪ್ರತಿ ದಿನ ಒಂದಲ್ಲ ಒಂದು ಎಂಟು ಘಂಟೆಯ ಮೀಟಿಂಗ್ ಇಟ್ಟೇ ಇರ್ತಾರೆ ನಮ್ಮ್ ಆಫೀಸಿನಲ್ಲಿ. ನಾನೋ ಎಷ್ಟು ಬೇಗ ಹೊರಟರೂ ಒಂದಲ್ಲ ಒಂದು ಕಾರಣದಿಂದ ಟ್ರಾಫಿಕ್ ಗೊಂದಲದಲ್ಲಿ ಸಿಕ್ಕು ಹಾಕಿಕೊಳ್ಳುವುದೇ ಹೆಚ್ಚು (again, thanks to school buses noted above). ಅದಕ್ಕೆಂದೇ ನಾನು ಕಾಫಿ ಕುಡಿಯಲಿ ಬಿಡಲಿ ನನ್ನ ರಕ್ತದೊತ್ತಡ ಮುಂಜಾನೆ ಏಳರಿಂದ ಒಂಭತ್ತು ಘಂಟೆಯವರೆಗೆ ಹೆಚ್ಚು ಇರೋದು ಖಾಯಂ. ಆದ್ದರಿಂದಲೇ ನಾನು ವಾಚಿನ ಡಯಲಿನಲ್ಲಿ ಫಾರ್ ಎವರ್ ಎಂಟು ಘಂಟೆ ಎನ್ನುವ ಕಾನ್ಸೆಪ್ಟ್ ಅನ್ನೇ ತೆಗೆದು ಹಾಕಿ ಬೆಳಿಗ್ಗೆ ಏಳರಿಂದ ಒಂಭತ್ತರವರೆಗೆ ಆಫೀಸಿಗೆ ತಲುಪಿದರೆ ಸಾಕು ಎನ್ನುವ ಹೊಸ ಕಾನೂನನ್ನು ಜಾರಿಗೆ ತರೋದು.

- I will convert Shareholders into Chair holders!
ಇದು ಸಂಪೂರ್ಣ ರೆಬೆಲಿಯಸ್ ಅಪ್ರೋಚ್...ನಾವೆಲ್ಲ ಕಂಪನಿಗಳ ಸ್ಟಾಕ್ ಅಥವಾ ಶೇರುಗಳನ್ನು ಕೊಂಡುಕೊಂಡು ಬಡವರಾಗಿರೋದು ನಿಮಗೆಲ್ಲ ಗೊತ್ತೇ ಇರೋ ವಿಚಾರ. ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಶೇರ್ ಹೋಲ್ಡರ್ ಕೂಡ ಆ ಕಂಪನಿಯ ತಕ್ಕಮಟ್ಟಿನ ಪಾಲುದಾರ. ಆದ್ದರಿಂದ ಇಂದಿದ್ದು ನಾಳೆ ಮರೆಯಾಗುವ ನಮ್ಮ ಪೇಪರ್ ಹಣ ಹಾಗೂ ಅದಕ್ಕೆ ಬರುವ ಇಮ್ಯಾಜಿನರಿ ಓನರ್‌ಶಿಪ್‌ಗೆ ಪ್ರತಿಯಾಗಿ ಕಂಪನಿ ಬೀಳುವ ಹೊತ್ತಿಗೆ ಹಣ ಬಾರದಿದ್ದರೂ ಆ ಕಂಪನಿಗಳ ಕುರ್ಚಿ, ಮೇಜು, ಅಲ್ಲಿನ ಫಿಕ್ಸ್‌ಚರುಗಳು ಮೊದಲಾದವುಗಳನ್ನು ನಾವು ಹಳೆಯ ಶತಮಾನದಲ್ಲಿ ಮಾಡುತ್ತಿದ್ದ ಹಾಗೆ ದಂಗೆ ಎದ್ದು ಕಿತ್ತುಕೊಳ್ಳಬೇಕು ಎನ್ನುವುದು ನನ್ನ ವಾದ. ಶೇರುಗಳು ಹೋದರೂ ಹೋಗಲಿ ಒಂದು ಚೇರ್ ಆದರೂ ಸಿಗಲಿ ಎನ್ನುವುದು ನನ್ನ ಅಭಿಮತ.

***
ನಿಮ್ಮ ಓಟ್ ಅನ್ನು ಖಂಡಿತ ನನಗೇ ಹಾಕ್ತೀರಿ ತಾನೆ?© copyright http://antaranga.blogspot.com
Categories: ಕನ್ನಡ ಪುಟಗಳು

ವಿಶ್ವದ ವ್ಯಾಪಾರದ ಅಲ್ಲೋಲ ಕಲ್ಲೋಲ

Wed, 2008-10-15 08:28
’ನಾವು ಐತಿಹಾಸಿಕವಾಗಿ ಒಂದು ಮಹತ್ವದ ಕ್ಷಣದಲ್ಲಿದ್ದೇವೆ’ ಎಂತಲೇ ನಾನು ನನ್ನ ಪರಿಚಯದವರಿಗೆ ಹೇಳೋದು.

ಇದು ಖಂಡಿತವಾಗಿಯೂ ಸೆಲೆಬ್ರೇಷನ್ ವಿಷಯವಂತೂ ಅಲ್ಲವೇ ಅಲ್ಲ, ವಿಶ್ವದ ಮಾರುಕಟ್ಟೆಗಳು ದುಸ್ಥಿತಿಯಲ್ಲಿರುವಾಗ ಅಂಕಣ-ಬ್ಲಾಗ್-ಮೊದಲಾದ ಸ್ವರೂಪಗಳಲ್ಲಿ ಆ ಬಗ್ಗೆ ಒಂದೆರಡು ಹನಿ ಕಣ್ಣೀರು ಸುರಿಸದೇ ಹೋದರೆ ನಾವು ಸಮಕಾಲೀನವಾಗಿ ಏನೂ ಸ್ಪಂದಿಸಿದಂತೆ ಆಗೋದೆ ಇಲ್ಲ. ಯಾವ ಬರಹಕ್ಕಾದರೂ ಆ ಒಂದು ಸಮಕಾಲೀನ ಸ್ಪಂದನಕ್ಕೆ ಅವಕಾಶವಿದ್ದಾಗಲೇ ಅದು ಪ್ರಸ್ತುತವೆನಿಸೋದಂತೆ. ಅದೇ - ನಮ್ಮತನ, ನಾವು, ನಮ್ಮ ಹಣೇ ಬರಹ - ಅಂತ ಬರೀತಾ ಹೋದರೆ ಬೇಕಾದಷ್ಟು ಬರೀತಲೇ ಹೋಗಬಹುದು. ಅಂತಹ ಬರಹ ನಾಸ್ಟಾಲ್ಜಿಯ, ಮಣ್ಣೂ-ಮಸಿ ರೂಪ ಪಡೆದು ಓದೋರಿಗೆ ಹಾಗೂ ಬರೆಯೋರಿಗೆ ಚಿಟ್ಟು ಹಿಡಿಸೋದು ನಿಜ.

***

ಅವೇ ಫೈನಾನ್ಷಿಯಲ್ ವೆಬ್‌ಸೈಟ್‌ಗಳಲ್ಲಿ ಅಥವಾ ಇತರ ವರದಿಗಳಲ್ಲಿ ಅನುರಣಿಸಿದ್ದನ್ನ ಇಲ್ಲಿ ಮಕ್ಕೀಕಾ ಮಕ್ಕಿ ಬರೆದು ಬಿಸಾಡಿದರೆ ಅವುಗಳಿಗೆ ರೆಫೆರೆನ್ಸ್ ನೀಡಿದರೆ ಏನು ಗುಣ ಬಂತು ಹೇಳಿ? ಅದರ ಬದಲು ನಮ್ಮ ನಿಮ್ಮ ಮನಸ್ಸುಗಳಲ್ಲಿರೋ ಒಂದಿಷ್ಟು ಪ್ರಶ್ನೆಗಳಿಗೆ ಸಾಂತ್ವನ ಸಿಗುವ ಮಾತೇನಾದರೂ ಇದ್ದರೆ ಹೊತ್ತಿ ಉರಿಯೋ ಬೆಂಕಿಗೆ ಒಂದು ಲೋಟ ನೀರನ್ನಾದರೂ ಹಾಕಿದಂತಾಗಬಹುದು. ನಾನು ಸಿಂಪಡಿಸೋ ನೀರು ಅದು ಬೆಂಕಿಯನ್ನು ತಲುಪುತ್ತಿದ್ದ ಹಾಗೇ ಅಷ್ಟೇ ವೇಗವಾಗಿ ಆವಿಯಾಗಿ ಮುಗಿಲಿನೆಡೆಗೆ ಪಯಣಿಸಿದಂತೂ ನಿಜ - ಅದೇ ಹಗುರವಾದದ್ದು ಮೇಲಕ್ಕೆ ಹೋಗೋ ನಿಸರ್ಗದ ತರ್ಕ!

ನನಗೆ ’ಪಿಂಗ್’ ಮಾಡಲಾದ, ನಾನು ಇ-ಮೇಲ್‌ನಲ್ಲಿ ಓದಲಾದ ಕನ್ನಡ ಮನಸ್ಥಿತಿಯನ್ನು ವಿಶ್ಲೇಷಿಸಲಾಗಿ - ’ಸ್ಟಾಕ್ ಮಾರ್ಕೆಟ್ಟಿನಲ್ಲಿ ಟೋಪಿ ಹಾಕಿಸಿಕೊಂಡೆವು!’ ಎನ್ನುವ ಪಕ್ಕಾ ಕನ್ನಡಿಗರ ಅಂಬೋಣ ಏನು ಹೇಳಲಿ. ಮಾರ್ಕೆಟ್ಟಿನಲ್ಲಿ ಇಂದು ನೂರು ರೂಪಾಯಿ ಹಾಕಿ ನಾಳೆ ಅದು ಸಾವಿರವಾಗಲಿ ಎನ್ನುವ ತಿರುಕನ ಕನಸನ್ನಂತೂ ಈ ಕಾಲದಲ್ಲಿ ನಾವು ಕಾಣದಿದ್ದರೆ ಸಾಕು. ನನ್ನ ವೈಯಕ್ತಿಕ ಫೈನಾನ್ಷಿಯಲ್ ಪೋರ್ಟ್‌ಫೋಲಿಯೋ ಒಬ್ಬ ಪ್ರೊಫೆಷನಲ್ ಅಡ್ವೈಸರ್‌ನಿಂದ ಮ್ಯಾನೇಜ್‌ಮಾಡಲ್ಪಟ್ಟದ್ದು, ಸಾಕಷ್ಟು ಡೈವರ್ಸಿಫಿಕೇಷನ್ನು ಹಾಗೂ ವಿಧವಿಧವಾದ ಇನ್‌ವೆಷ್ಟ್‌ಮೆಂಟ್ ವೆಹಿಕಲ್ಲ್‌ಗಳಗೊಂಡಿದ್ದೂ ಈ ನಮ್ಮ ಇಂಡೆಕ್ಸ್‌ಗಳು ಕಳೆದವಾರ (ಅಕ್ಟೋಬರ್ ಹತ್ತು, ೨೦೦೮) ಬುಡತಲುಪಿದ ಪರಿಣಾಮವಾಗಿ ಸುಮಾರು ಶೇಕಡಾ ನಲವತ್ತರಷ್ಟು ಮೌಲ್ಯವನ್ನು ಕಳೆದುಕೊಂಡು ಬಹಳ ದುಸ್ಥಿತಿಯಲ್ಲಿತ್ತು. ಅಯ್ಯೋ, ಏನು ಮಾಡೋದು ಎಂದುಕೊಂಡು ಮುವತ್ತರ ದಶಕದ (೧೯೩೦) ಗ್ರೇಟ್ ಡಿಪ್ರೆಷನ್ನ್ ಹಾಗೂ ಅದರ ಕುರಿತ ಆರ್ಟಿಕಲ್ಲುಗಳನ್ನು ದನ ಬಯಲಿನಲ್ಲಿ ಮೆಂದಂತೆ ಕುಳಿತು ಓದಿದ ಪರಿಣಾಮವಾಗಿ ನನ್ನ ಪಕ್ಕದಲ್ಲಿದ್ದ ನೋಟ್ಸ್‌ನಲ್ಲಿ ಏನೇನು ದಿನಸಿ ಹಾಗೂ ದಿನಬಳಕೆ ಸಾಮಾನುಗಳನ್ನು ತಂದು ಬೇಸ್‌ಮೆಂಟ್‌ನಲ್ಲಿ ಸಂಗ್ರಹಿಸಿ ಇಡಬಹುದು ಎಂದು ಪಟ್ಟಿ ಮಾಡಲು ಒಟ್ಟು ಹದಿನಾರು (೧೬) ಸಾಮಾನುಗಳ ಹೆಸರುಗಳು ದಾಖಲಾದವು. ಅದರಲ್ಲಿ ಬಿಡಿ ಚಿಲ್ಲರೆ, ಕ್ಯಾಷ್‌ನಿಂದ ಹಿಡಿದು ಕ್ಯಾನ್ಡ್ ಗೂಡ್ಸ್ ಹಾಗೂ ಅಕ್ಕಿ-ಬೇಳೆಗಳು ಸೇರಿಕೊಂಡಿದ್ದವು. ಅಕಸ್ಮಾತ್, ಆ ಅನ್‌ಥಿಂಕೇಬಲ್ ಇವೆಂಟ್ - ಅದೇ ಗ್ರೇಟ್ ಡಿಪ್ರೆಶ್ಷನ್ನ್ ಅದರ ಜೊತೆಗಿನ ಅರಾಜಕತೆ - ಏನಾದರೂ ಆಗೇ ಹೋದರೆ ಏನು ಮಾಡಲಿ ಎನ್ನುವ ಕೊರಗು ನಾನು ಬೇಡವೆಂದರೂ ನನ್ನ ಬೆನ್ನು ಬಿಡದಾಯಿತು. ಕಳೆದ ಶುಕ್ರವಾರ ಬೆಳಿಗ್ಗೆ (ಅಕ್ಟೋಬರ್ ೧೦, ೨೦೦೮) ಒಂಭತ್ತೂವರೆ ಹೊತ್ತಿಗೆ ಡಾವ್‌ಜೋನ್ಸ್ ಒಂದು ಸಾವಿರ ಪಾಯಿಂಟ್ ಕುಸಿದು ಬಿದ್ದಿತ್ತು, ಇನ್ನೂ ಮಾರ್ಕೆಟ್ ಓಪನ್ ಆಗುವುದಕ್ಕೆ ಮೊದಲೇ - ಯಾವತ್ತಾದರೂ ಬೇಕಾದೀತು ಎಂದು ಅದರ ಸ್ಕ್ರೀನ್‌ಶಾಟ್ ಅನ್ನೂ ಸಹ ತೆಗೆದಿಟ್ಟುಕೊಂಡೆ.

ಪುಣ್ಯ - ಸೋಮವಾರ ಬೆಳಿಗ್ಗೆ ಎಲ್ಲೆಡೆ ಚೇತರಿಕೆ ಮೂಡತೊಡಗಿದ್ದು ಇಂದು ಮಂಗಳವಾರದ ಕೊನೆಗೆ ಅಲ್ಲಲ್ಲಿ ಕೆಂಪು (ಬೀಳು) ಕಾಣಿಸಿಕೊಂಡರೂ ಹೆಚ್ಚು ಹಸಿರು (ಏಳು) ಗಮನಕ್ಕೆ ಬಂದಿದ್ದು ನಮ್ಮೆಲ್ಲರ ಪುಣ್ಯ. ಈ ಕ್ರೆಡಿಟ್ ಹಾಗೂ ಬ್ಯಾಂಕಿಂಗ್ ವ್ಯವಸ್ಥೆಯ ಕ್ರೈಸಿಸ್ ಬಗೆ ಹರಿಯೋದಕ್ಕೆ ಇನ್ನೂ ಹಲವಾರು ತಿಂಗಳುಗಳೇ ಬೇಕು. ಸದ್ಯ, ಇಂದಿನ ಕಮ್ಮ್ಯೂನಿಕೇಷನ್ನ್ ಯುಗದಲ್ಲಿ ವಿಶ್ವದ ಅನೇಕ ದೇಶಗಳು ಮಾತುಕಥೆಗೆ ತೊಡಗಿಕೊಂಡು ಒಂದು ಯೂನಿವರ್ಸಲ್ ಸೊಲ್ಯೂಷನ್ ಕಂಡುಹಿಡಿದುಕೊಂಡಿದ್ದು ನಮಗಂತೂ ಸಾಕಪ್ಪಾ ಸಾಕು ಎನ್ನಿಸುವಷ್ಟರ ಮಟ್ಟಿಗೆ ಬಂದಿತ್ತು.

***

ಇವತ್ತು ಮಾರ್ಕೆಟ್ ಬೀಳುತ್ತಾ ಏಳುತ್ತಾ ಅಂತ ಯೋಚಿಸ್ತಾ ಕೂರೋದಕ್ಕೆ ಸಮಯವಂತೂ ಖಂಡಿತವಿಲ್ಲ, ಹಾಗೆ ಮಾಡೋದರಿಂದ ನಮ್ಮ ನಮ್ಮ ಮಾನಸಿಕ ಸ್ವ್ಯಾಸ್ಥ್ಯ ಹಾಳೋಗೋದು ಖಂಡಿತ, ಅದಕ್ಕೇ ಮನಿ ಮ್ಯಾನೇಜ್‌ಮೆಂಟ್ ಅನ್ನೋದನ್ನ ನಾನು ಔಟ್‌ಸೋರ್ಸ್ ಮಾಡಿರೋದು. ಅಮೇರಿಕದ ಒಳ್ಳೆಯ ಯೂನಿವರ್ಸಿಟಿಯಲ್ಲಿ ಫೈನ್ಯಾನ್ಷಿಯಲ್ ಮ್ಯಾನೇಜ್‌ಮೆಂಟ್ ಕೋರ್ಸ್‌ನಲ್ಲಿ ’ಎ’ ಗ್ರೇಡ್ ತೆಗೆದುಕೊಂಡಿದ್ದೇನೆ ಎನ್ನುವ ಹುಂಬ ಧೈರ್ಯದ ನನ್ನ ಮೊದಲಿನ ಇನ್‌ವೆಷ್ಟ್‌ಮೆಂಟ್ ದಿನಗಳಲ್ಲಿ ನಾನು ಕೊರಗಿದ್ದು ಹಾಗೂ ಕಳೆದುಕೊಂಡದ್ದೇ ಹೆಚ್ಚು. ಅದೇ ಕಳೆದ ಆರೇಳು ವರ್ಷಗಳ ಪೊಫೆಷನಲ್ ಸಹಾಯ ತೆಗೆದುಕೊಂಡ ಹಿನ್ನೆಲೆಯಲ್ಲಿ ನನಗೆ ಗಳಿಕೆ ಖಂಡಿತ ಇದೆ, ಜೊತೆಗೆ ನನ್ನ ಕಡಿಮೆಯಾದ ಕೊರಗಿನ ಬಗ್ಗೆ ಹೆಗ್ಗಳಿಕೆ ಕೂಡ.

ಒಂದು ಮುಖ್ಯವಾದ ಅಂಶವೆಂದರೆ - ನಿಮ್ಮ ಹಣವನ್ನು ನೀವೇ ಮ್ಯಾನೇಜ್‌ ಮಾಡದೇ (ಅಂದರೆ ಹೂಡಿಕೆ-ತೊಡಿಗೆ ವಿಚಾರದಲ್ಲಿ), let a professional do his/her job, pay them good! Outsourcing ನಿಂದ ಅಷ್ಟೂ ಕಲಿಯಲಿಲ್ಲವೆಂದರೆ - ನಮ್ಮ core competence ಅಲ್ಲದ ವಿಷಯವನ್ನು ನಾವು ಹೇಗೆ ತಾನೇ ಸಂಬಾಳಿಸಬಲ್ಲೆವು?

ಜೊತೆಗೆ ನಿಮ್ಮ ನಿಮ್ಮ ರಿಸ್ಕ್ ತೆಗೆದುಕೊಳ್ಳುವ ವಿಷಯದಲ್ಲಿ ಲಾಂಗ್ ಟರ್ಮ್ ಗುರಿಗಳನ್ನೂ ಇಟ್ಟುಕೊಳ್ಳಿ, ಶಾರ್ಟ್ ಟರ್ಮ್‌ನಲ್ಲಿ ಆದಾಯ ಬರೋದು ಉತ್ತಮ, ಆದರೆ ನೀವು ಹೂಡಿದ ಹಣ ಐದು-ಹತ್ತು-ಇಪ್ಪತ್ತು ವರ್ಷಗಳಲ್ಲಿ ಹಣದುಬ್ಬರ (ಇನ್‌ಫ್ಲೇಷನ್) ಕ್ಕೆ ಹೊಂದಿಕೊಂಡು ಹೇಗೆ ಬೆಳೆಯಬಲ್ಲದು ಎನ್ನುವುದೂ ಮುಖ್ಯವಲ್ಲವೇ?

ಕೊನೆಗೆ - ಜನಪ್ರಿಯವಾದದ್ದರ ಬೆನ್ನು ಹತ್ತುವುದರ ಬದಲು ಫಂಡಮೆಂಟಲ್ಸ್ ಮೊರೆ ಹೋಗಿ ಹಾಗೂ ಸಾಲಿಡ್ ಕಂಪನಿಗಳಲ್ಲಿ ಹಣ ತೊಡಗಿಸಿ - ಅಂದರೆ ಅವರ ಉತ್ಪನ್ನ, ಬ್ಯಾಲೆನ್ಸ್ ಶೀಟ್, ಡಿವಿಡೆಂಡ್, ಮೊದಲಾದವುಗಳನ್ನೂ ಗಮನಿಸಿ. ಉದಾಹರಣೆಗೆ ಗೂಗಲ್, ಮೈಕ್ರೋಸಾಫ್ಟ್ ಟೆಕ್ನಾಲಜಿ ಕಂಪನಿಗಳಾಗಿ ಜನಪ್ರಿಯವಿರಬಹುದು, ನೀವು ತೊಡಗಿಸಿದ ಒಂದು ಸಾವಿರ ಡಾಲರ್ ಅಥವಾ ರೂಪಾಯಿ ಐದು ಹತ್ತು ವರ್ಷಗಳಲ್ಲಿ ಯಾವ ಉತ್ಪನ್ನವನ್ನು ತರಬಹುದು ಎನ್ನುವುದನ್ನು ನೋಡಿ, ಜೊತೆಗೆ ಜಾನ್‌ಸನ್ ಎಂಡ್ ಜಾನ್ಸನ್, ಮೆಕ್‌ಡಾನಲ್ಡ್ ಮೊದಲಾದ ಕಂಪನಿಗಳನ್ನೂ ನೋಡಿ. ನೀವು ಪೆಟ್ರೋ ಕಜಕಸ್ಥಾನ್ ಅನ್ನೋ ಸ್ಟಾಕ್ ಬಗ್ಗೆ ಕೇಳಿದಯೇ ಇರಬಹುದು, ಇನ್ಯಾವುದೋ ಎನರ್ಜಿ ಕಂಪನಿ ಇರಬಹುದು, ಆಯಿಲ್ ಕಂಪನಿ ಇರಬಹುದು (ಸುಮ್ಮನೇ ಉದಾಹರಣೆಗೆ ಈ ಕಂಪನಿಗಳ ಹೆಸರು ಹೇಳುತ್ತಿದ್ದೇನೆ ಅಷ್ಟೆ).© copyright http://antaranga.blogspot.com
Categories: ಕನ್ನಡ ಪುಟಗಳು

ಜಾಗೃತಿ ಆರ್ಯಾವತಿ ಹಾಗೂ ನಮ್ಮತನ

Mon, 2008-10-06 08:18
’ಏಕೆ ನಿನ್ನ ಹೆಸರನ್ನು J J ಅಂತ ಬದಲಾಯಿಸಿಕೊಂಡಿದ್ದೀಯಾ?’ ಎಂದು ಇಂದು ವಾಲ್‌ಮಾರ್ಟಿನಲ್ಲಿ ಕೆಲಸ ಮಾಡುತ್ತಿದ್ದ ಹೆಂಗಸೊಬ್ಬಳನ್ನು ಕೇಳಿದೆ. ಭಾರತೀಯ ಮೂಲದ ಆಕೆ ಅಪರೂಪಕ್ಕೊಮ್ಮೆ ನಾನು ಶಾಪ್ಪಿಂಗ್ ಹೋದಾಗಲೆಲ್ಲ ಸಿಕ್ಕು ಮುಖ ಪರಿಚಯವಿದ್ದಂತೆ ’ನಾವು ಭಾರತೀಯರು’ ಎನ್ನುವ ಸಂಬಂಧವೂ ನಮಗೆ ಹೇಳದ ಹಾಗೆ ಬೆಳೆದು ಬಂದಿದೆ. ಆಕೆಯ ನೇಮ್ ಟ್ಯಾಗ್‌ನಲ್ಲಿದ್ದದ್ದು ’ಜಾಗೃತಿ’ ಎಂಬುದಾಗಿ, ಇಂದು ಅದರ ಮೇಲೆ ಮತ್ತೊಂದು ಹೊಸ ಹೆಸರಿನ ಟ್ಯಾಗ್ ಮುದ್ರಿಸಿಕೊಂಡು ಜೆಜೆ ಎಂದು ಓಡಾಡಿಕೊಂಡಿದ್ದಾಳೆ.

’ಏನಾಯ್ತು?’ ಎಂದರೆ ಆಕೆ ’ಅವರಿಗೆಲ್ಲ ನನ್ನ ಹೆಸರನ್ನು ಉಚ್ಛರಿಸುವುದಕ್ಕೆ ಕಷ್ಟವಾಗುತ್ತಿತ್ತು, ಅದಕ್ಕೇ ಈ ಹೆಸರು ಕೊಟ್ಟಿದ್ದಾರೆ...’
ನಾನು ಆಕೆಯ ಮಾತನ್ನು ಮಧ್ಯದಲ್ಲಿ ತುಂಡು ಮಾಡಿ ಕೇಳಿದೆ, ’ಜಾಗೃತಿ ಅನ್ನೋ ಪದ ಕಷ್ಟವೇ? ನೀನು ಹಾಗೆ ಆಗೋದಿಲ್ಲ ಎನ್ನಬೇಕಿತ್ತು...’ ಎನ್ನುವಾಗ, ಆಕೆ ಚಿಕ್ಕ ಮುಖ ಮಾಡಿಕೊಂಡು ಹೇಳಿದಳು, ’ಪುಸ್ತಕದಲ್ಲೆಲ್ಲಾ ಜಾಗೃತಿ ಅಂತಲೇ ಇದೆ, ಆದರೆ ಕರೆಯುವುದಕ್ಕೆ ಈ ಹೆಸರನ್ನು ಕೊಟ್ಟರು ನಾನೇನು ಹೇಳಲಿಲ್ಲ’.

ನಮ್ಮ ಒಂದು ನಿಮಿಷದ ಭೇಟಿಯಲ್ಲಿ ನಾನೇನೂ ಹೆಚ್ಚು ಮಾತು ಬೆಳೆಸಲಿಲ್ಲ, ಬದಲಿಗೆ ’ಮತ್ತೆ ಹೇಳಿ ನೋಡಿ, ಜಾಗೃತಿ ಅನ್ನೋ ಹೆಸರು ನಿಜವಾಗಿಯೂ ಚೆನ್ನಾಗಿದೆ, ಜೊತೆಗೆ ಅಮೇರಿಕನ್ನರಿಗೆ ಹೇಳುವುದಕ್ಕೆ ಅಷ್ಟೊಂದು ಕಷ್ಟವಾದುದೇನೂ ಅಲ್ಲ’ ಎಂದು ಹೇಳಿ ನನ್ನ ದಾರಿ ಹಿಡಿದೆ.

ನನ್ನ ಈ ಹೆಸರಿನ ಉಚ್ಛಾರಕ್ಕೆ ಪುಷ್ಟಿಕೊಡುವ ಹಾಗೆ ಆಗಷ್ಟೇ ಲೈಬ್ರರಿಯಲ್ಲಿ ಬಾರೋ ಮಾಡಿದ ಸಿಎನ್‌ಎನ್ ನ ಆಂಡರ್‌ಸನ್ ಕೂಪರ್ (Anderson Cooper) ನ ಟಿಪ್ಪಣಿಗಳ ಆಡಿಯೋ ಸಿಡಿ ಕಾರಿನಲ್ಲಿ ನಡೆಯುತ್ತಿತ್ತು, ಅದರಲ್ಲಿ ಆತ ಶ್ರೀಲಂಕಾದಲ್ಲಿ ಸುನಾಮಿಯ ಅನುಭವಗಳನ್ನು ದಾಖಲು ಮಾಡಿದ ಬಗ್ಗೆ ಓದುತ್ತಾ ಹೋಗುತ್ತಿದ್ದಾಗ ಅಲ್ಲಿ ಸುನಾಮಿಯ ತರುವಾಯ ಆಕ್ಸಿಡೆಂಟ್‌ಗೆ ಒಳಗಾದ ರೈಲಿನ ಅವಶೇಷವೊಂದನ್ನು ವಿವರಿಸುತ್ತಾ ಆರ್ಯವಾಟಿಯ ಕಣ್ಣೆದುರೇ ಆಕೆಯ ಮಗ ಹಾಗೂ ಅಮ್ಮ ಕಾಣೆಯಾದುದರ ಬಗ್ಗೆ ವಿವರಿಸುವ ಒಂದು ಪ್ಯಾರಾಗ್ರಾಫ್ ಬಂತು. ಆರ್ಯ...ವಾಟಿ...ಯ ಬಗ್ಗೆ ಮತ್ತಷ್ಟು ಚಿಂತಿಸಲಾಗಿ ಅದು ಆರ್ಯಾವತಿ ಇದ್ದಿರಬಹುದೇನೋ ಅನ್ನೋ ಕಲ್ಪನೆ ಮೂಡಿಬಂತು. Mom Yes, Son No...ಎಂದು ಹೇಳುತ್ತಾ ಇಬ್ಬರನ್ನೂ ಕಳೆದುಕೊಂಡು ಒಬ್ಬರ ಕಳೇಬರವನ್ನಷ್ಟೇ ಕಳೆದುಕೊಂಡ ದುಃಖದಲ್ಲಿದ್ದ ಆರ್ಯಾವತಿಯ ಪ್ರೈಯಾರಿಟಿಗಳು ಖಂಡಿತವಾಗಿಯೂ ಬೇರೆಯೇ ಇದ್ದಿರುತ್ತವೆ. ಆಂಡರ್‍ಸನ್ ಕೂಪರ್ ಎನ್ನುವ ರಿಪೋರ್ಟರ್ ತನ್ನ ಹೆಸರನ್ನು ಒಂದು ದಿನ ಹೀಗೆ ಬಳಸಿಕೊಳ್ಳುತ್ತಾನೆ ಎನ್ನುವ ಕಲ್ಪನೆಯೂ ಆಕೆಗೆ ಇರಲಿಕ್ಕಿಲ್ಲ.

***

ನಮಗೆ ನಮ್ಮತನ ನಮ್ಮದರಲ್ಲಿ ಏನೋ ಕೊರತೆ ಇದೆ. ಆ ಕೊರತೆ ನಮಗೆ ಕೀಳು ಮನೋಭಾವನೆಯನ್ನು ತಂದುಕೊಟ್ಟಿದೆ. ಜಾಗೃತಿಯ ಹೆಸರನ್ನು ಇದ್ದ ಹಾಗೆ ಹೇಳುವಷ್ಟು ನಾಲಿಗೆ ತಿರುಗಿಸುವುದಕ್ಕೆ ಆಕೆಯ ವಾಲ್‌ಮಾರ್ಟ್ ಸಹೋದ್ಯೋಗಿಗಳು ಕಷ್ಟಪಡಬೇಕಾಗಿಲ್ಲ, ಆಕೆಯೇ ಬದಲಾಗಿದ್ದಾಳೆ. ವಿಶ್ವದ ದೊಡ್ಡ ಕಾರ್ಪೋರೇಟ್ ವ್ಯವಸ್ಥೆಯ ಮುಂದೆ ಘಂಟೆಗೆ ಇಂತಿಷ್ಟು ಎಂದು ಕೆಲಸ ಮಾಡುವ ಆಕ್ರಂದನವೆಲ್ಲಿ ನಡೆದೀತು? ಇದರಲ್ಲಿ ಘಂಟೆಗೆ ಇಂತಿಷ್ಟು ಕೆಲಸ ಮಾಡುವ ಮಿತಿಯಾಗಲೀ ನಮ್ಮ ಪದವಿ ಹುದ್ದೆಗಳ್ಯಾವುವೂ ಲೆಕ್ಕಕ್ಕೆ ಬಾರದವು. ನಾನು ’ಹೊಸನಗರ’ ಎಂದು ಅಮೇರಿಕನ್ನರಿಗೆ ಹೇಳುವಲ್ಲಿ ನನ್ನ ಉಚ್ಛಾರಣೆಯಲ್ಲಿ ಏನನ್ನಾದರೂ ಬದಲಾಯಿಸಿಕೊಳ್ಳುತ್ತೇನೆಯೇ? ಏಕೆ?

ನಿನ್ನೆ ನಮ್ಮ ಮನೆಯಿಂದ ಅರವತ್ತು ಮೈಲು ದೂರದಲ್ಲಿರೋ ನ್ಯೂ ಯಾರ್ಕ್ ನಗರದ ಎಂಪೈರ್ ಸ್ಟೇಟ್ ಬಿಲ್ಡಿಂಗ್ ಅನ್ನು ನೋಡಿಕೊಂಡು ಬರಲು ನಮ್ಮ ಮನೆಯವರೊಂದಿಗೆ ಹೋಗಿದ್ದೆ. ಅಲ್ಲಿ ಹೆಚ್ಚು ಜನ ಬರೋ ಪ್ರವಾಸಿಗರಿಗೆ ಆಡಿಯೋ ಉಪಕರಣವನ್ನು ಕೊಡುತ್ತಿದ್ದವ ನೀವು ಯಾವ ದೇಶದವರು ಎಂದು ಔಪಚಾರಿಕವಾಗೇ ಮಾತನಾಡುತ್ತಾ ಅವರ ಬಗ್ಗೆ ಹೆಚ್ಚು ತಿಳಿದುಕೊಳ್ಳುತ್ತಿದ್ದ. ಇದೇ ಕಟ್ಟದ ಪಕ್ಕದಲ್ಲೇ ದಿನವೂ ನಡೆದುಕೊಂಡು ಹೋಗಿ ಸುಮಾರು ನಾಲ್ಕು ವರ್ಷ ಕೆಲಸ ಮಾಡಿದ್ದೇನೆ ಎನ್ನುವ ಕನ್ಸೆಷನ್ನ್ ಕೂಡಾ ಇಲ್ಲದೇ ’ನೀವು ಭಾರತೀಯರು!’ ಎಂದು ಅವನೇ ಎಲ್ಲರಿಗೂ ಕೇಳುವಂತೆ ಗಟ್ಟಿಯಾಗಿ ಹೇಳಿದ. ಅವನ ಕಣ್ಣೆದುರಿನಲ್ಲಿ ನಾನು ಭಾರತೀಯನೇ, ಇಂದಿಗೂ ಎಂದಿಗೂ. ನಾನು ಕುಡಿದ ಅದೆಷ್ಟೋ ಸ್ಟಾರ್‌ಬಕ್ಸ್ ಕಾಫಿಯ ಗತ್ತು, ನಾನು ಓದಿದ ಅದೆಷ್ಟೋ ವಾಲ್ ಸ್ಟ್ರೀಟ್ ಜರ್ನಲ್ಲ್‌ನ ಕಿಮ್ಮತ್ತು, ನಾನು ಟ್ರೇನಿನಲ್ಲಿ ಮುಖದ ಮೇಲೆ ಆಗಾಗ್ಗೆ ಸೃಷ್ಟಿಸಿಕೊಂಡ ಹುಸಿಗಾಂಭೀರ್ಯದ ಚಹರೆ ಹಾಗೂ ಅದರ ಹಿಂದಿನ ಮೆದು ಧ್ವನಿ, ಇಲ್ಲಿ ಎಲ್ಲರಂತೆ ನಾನೂ ಟ್ಯಾಕ್ಸ್ ಕೊಟ್ಟು ಅನುಭವಿಸುವ ಹಸಿರು ಕಾರ್ಡಿನ ವೈಭವದ ದ್ವಂದ್ವ ಇವೆಲ್ಲವನ್ನೂ ಎಂಭತ್ತನೇ ಮಹಡಿಯಿಂದ ಎತ್ತಿ ಹಲವಾರು ಆಶಾವಾದಗಳೆನ್ನುವ ತರಗೆಲೆಗಳನ್ನು ಅದೆಲ್ಲಿಂದಲೋ ಸುತ್ತಿ ಸುಳಿದು ತರುತ್ತಿದ್ದ ಗಾಳಿಗೆ ಎಸೆದ ಹಾಗಾಯಿತು.

’ಹೌದು, ನಾನು ಭಾರತೀಯನೇ!’ ಅಷ್ಟೇ ಗಟ್ಟಿಯಾಗಿ ಹೇಳಿದೆ. ’ಬೇಕಾಗಿಲ್ಲ ನಿಮ್ಮ ಪರಂಪರೆಯನ್ನು ಸಾರಿ ಹೇಳುವ ಕಿವಿ ಮಾತು (ಆಡಿಯೋ ಯಂತ್ರ), ಅದರ ಬಗ್ಗೆಯೂ ಸಾಕಷ್ಟು ಬಲ್ಲೆ’ ಎಂದು ಹೇಳಿದವನೇ ಬಿರುಬಿರನೆ ನಡೆದು ಮುಂದೆ ಹೋದೆ. ಭೂಮಿಗೂ ಆಕಾಶಕ್ಕೂ ನಡುವೆ ಸಂಪರ್ಕ ಏರ್ಪಡಿಸುವಂತೆ ಬೆಳೆಸಿದ ಕಟ್ಟಡವನ್ನು ಅದೆಲ್ಲೆಲ್ಲಿಂದಲೋ ಬಂದು ಹತ್ತೊಂಭತ್ತು ಡಾಲರ್ರನ್ನು ಕೊಟ್ಟು ನೋಡುವ ಜನರಿಗೆ ಮೂರು ಡಾಲರಿಗೊಂದರಂತೆ ಆಡಿಯೋ ಉಪಕರಣವನ್ನು ಬಾಡಿಗೆಗೆ ಕೊಡುವ ಮೂರು ಕಾಸಿನವನ ಬಳಿ ನನ್ನದೇನು ಅಹವಾಲು? ನೀನು ಕರಿ ಕಪ್ಪಗಿನವನು, ಮೊದಲು ನಿನ್ನ ಮೂಲ ಹಾಗೂ ಮರ್ಮವನ್ನು ಕೆದಕಿಕೊಂಡು ನೋಡು ಎಂದು ನಮ್ಮೂರಿನಲ್ಲಾಗಿದ್ದರೇ ಗಟ್ಟಿಯಾಗಿ ಹೇಳಿಯೇ ಬಿಡುತ್ತಿದ್ದೆ.

ಎಂಭತ್ತಾರನೇ ಮಹಡಿಯ ಹೊರಗೆ ಮೌನವಿದೆ! ಬೆಳೆದು ಆಕಾಶವನ್ನು ಉಳಿದವರೆಲ್ಲರಿಗಿಂತ ಹೆಚ್ಚು ಮುಟ್ಟಿದ ಗಾಂಭೀರ್ಯತೆ ಇದೆ. ದಿನಕ್ಕೊಂದಿಷ್ಟು ಬೆರಗು ಕಣ್ಣಿನವರನ್ನು ಸಮಾಧಾನಗೊಳಿಸಿದ ಸಾಂತ್ವನ ಮನಸ್ಥಿತಿ ಇದೆ. ಅದೇ ಮುಗಿಲು ಅಲ್ಲಿ ಭಾರತೀಯರು-ಅಮೇರಿಕನ್ನರು ಎಂಬ ಬೇಧ-ಭಾವವಿಲ್ಲ. ಆದರೆ ನೆಲಕ್ಕಿದೆ, ನೆಲದ ಮೇಲೆ ನಿಂತ ನಮಗಿದೆ ನಮ್ಮ ಜೊತೆಗಿನ ಕಟ್ಟಡಕ್ಕೂ ಇದೆ. ಮೇಲೆ ಹಾರಬೇಕೆನ್ನುವ ಕನಸುಗಳಿಗೆ ಯಾವ ಬಂಧನವಿಲ್ಲ, ಅಡ್ಡಿ ಆತಂಕಗಳಿಲ್ಲ; ಕೆಳಗೆ ಬದುಕಬೇಕೆನ್ನುವ ಬದುಕಿಗೆ ಹಲವಾರು ಬಂಧನಗಳಿವೆ, ಹೀಗಿರಬೇಕು ಎನ್ನುವವರಿದ್ದಾರೆ. ಹೀಗಿರುವ ನೆಲ ಮುಗಿಲುಗಳಲ್ಲಿ ನಾನು ಯಾವತ್ತಿದ್ದರೂ ಭಿನ್ನನೇ, ಎಲ್ಲಿದ್ದರೂ ನನ್ನ ಸ್ವಂತಿಕೆ ಎನ್ನುವುದು ಇದ್ದೇ ಇದೆ. ಅದಕ್ಕೇನಾದರೂ ಯಾರಾದರೂ ಅಡ್ಡಿ ಬಂದಾರೆಂದರೆ ಅಲ್ಲಿಂದ ಕಂಬಿ ಕೀಳುವಂತೆ ಪ್ರಚೋದಿಸುವುದು ನನ್ನತನವೇ. ಎಲ್ಲ ಕಡೆಯೂ ಇದ್ದು, ಎಲ್ಲೂ ಇರದಿರುವುದೇ ನಮ್ಮತನ.© copyright http://antaranga.blogspot.com
Categories: ಕನ್ನಡ ಪುಟಗಳು

Planet Kannada brought to you by Sampada Community via Sampada Foundation.
Setup and designed by Hari Prasad Nadig.

separator